ನವದೆಹಲಿ: ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಹೇಳಿದ್ದಾರೆ.
ರಾಜ್ಯಸಭಾ ಮತ್ತು ಲೋಕಸಭೆಯ ಸಂಸದರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭವು ಸಂಸತ್ತಿನಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ ಬೀಳ್ಗೊಡುಗೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಿದರು. 'ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲಾ ಭಾರತೀಯರಿಗೆ ನನ್ನ ಧನ್ಯವಾದ. 5 ವರ್ಷದ ಹಿಂದೆ ಇದೇ ವೇದಿಕೆಯಲ್ಲಿ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದೆ. ಇದೀಗ ಹಲವು ಸ್ಮರಣೀಯ ನೆನೆಪುಗಳು, ತೃಪ್ತ ಭಾವದಿಂದ ವಿದಾಯ ಹೇಳುತ್ತಿದ್ದೇನೆ. ಎಲ್ಲ ಸಂಸದರಿಗೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಸಂಸತ್ತನ್ನು ಪ್ರಜಾಪ್ರಭುತ್ವದ ದೇಗುಲ ಎಂದು ಕರೆದಿರುವ ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಸಂಸತ್ತಿನಲ್ಲಿ ಚರ್ಚೆ ಮತ್ತು ಭಿನ್ನಾಭಿಪ್ರಾಯದ ಹಕ್ಕುಗಳನ್ನು ಚಲಾಯಿಸುವಾಗ ಗಾಂಧಿ ತತ್ವವನ್ನು ಅನುಸರಿಸುವಂತೆ ಸಂಸದರಿಗೆ ಸೂಚಿಸಿದರು ಎಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.