ನವದೆಹಲಿ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯವು ಬುಧವಾರ ಬೆಳಗ್ಗೆ ನವದೆಹಲಿಯ ಕೆಂಪುಕೋಟೆಯಿಂದ ಸಂಸತ್ತಿನವರೆಗೆ ಸಂಸದರಿಗಾಗಿ 'ತಿರಂಗ ಬೈಕ್ ರ್ಯಾಲಿ' ಆಯೋಜಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರು ಈ ರ್ಯಾಲಿಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಮಂಗಳವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಜೋಶಿ, ಇದು ಸಂಸ್ಕೃತಿ ಸಚಿವಾಲಯದ ಕಾರ್ಯಕ್ರಮವಾಗಿದೆ. ಬಿಜೆಪಿ ಪಕ್ಷದ ಕಾರ್ಯಕ್ರಮವಲ್ಲ ಎಂದು ಸ್ಪಷ್ಟಪಡಿಸಿದರು. ಎಲ್ಲಾ ಪಕ್ಷಗಳ ಸಂಸದರು ಬೆಳಿಗ್ಗೆ 8.30ಕ್ಕೆ ಈ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಅವರು ಕೋರಿದರು.
ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 9 ರಿಂದ ಪ್ರಾರಂಭವಾಗಿ ಆಗಸ್ಟ್ 15 ರವರೆಗೆ ಒಂದು ವಾರದ ವರೆಗೆ ನಡೆಯುವ ಕಾರ್ಯಕ್ರಮಗಳ ಕುರಿತು ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಪಕ್ಷದ ಮುಖಂಡರಿಗೆ ಮಾಹಿತಿ ನೀಡಿದರು.