ಮುಳ್ಳೇರಿಯ : ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಕನ್ನಡೇತರ ಅಧ್ಯಾಪಕರನ್ನು ನೇಮಕ ಮಾಡಿ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗುವ ಘಟನೆ ಮತ್ತೆ ಮತ್ತೆ ನಡೆಯುತ್ತಿದೆ. ಕಾಸರಗೋಡಿನ ಮುಳ್ಳೇರಿಯ ಸಮೀಪದ ಆದೂರು ಸರ್ಕಾರಿ ಪ್ರೌಢ ಶಾಲೆಗೆ ಕನ್ನಡ ವಿಭಾಗದ ತರಗತಿಗಳಿಗೆ ಭೌತಶಾಸ್ತ್ರ ಪಾಠ ಮಾಡಲು ಕನ್ನಡೇತರ ಅಧ್ಯಾಪಕರನ್ನು ನೇಮಕ ಮಾಡಲಾಗಿದ್ದು ಇದನ್ನು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ತೀವ್ರವಾಗಿ ಖಂಡಿಸಿದೆ. ಕನ್ನಡ ಮಕ್ಕಳಿಗೆ ಆಗುತ್ತಿರುವ ಇಂತಹ ಅನ್ಯಾಯಗಳನ್ನು ಕೂಡಲೇ ಸರಿಪಡಿಸಬೇಕೆಂದು, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕೆಂದು ಆಗ್ರಹಿಸಿದೆ.
ಈ ಸಂಬಂಧ ಶಾಲೆಗೆ ಕನ್ನಡ ಅಧ್ಯಾಪಕರ ಸಂಘಟನೆಯ ನಿಯೋಗವು ಭೇಟಿ ನೀಡಿ, ಸಂಘಟನೆಯ ನಿಲುವನ್ನು ಶಾಲಾ ರಕ್ಷಕ ಶಿಕ್ಷಕ ಸಂಘ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿಯವರಿಗೆ ತಿಳಿಸಲಾಯಿತು. ನಿಯೋಗದಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಉಪಾಧ್ಯಕ್ಷೆ ಪ್ರಭಾವತಿ ಕೆದಿಲಾಯ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ, ಕುಂಬಳೆ ಉಪಜಿಲ್ಲಾ ಸಮಿತಿಯ ಅಧ್ಯಕ್ಷ ಶಿವಕುಮಾರ್ ಎಸ್, ಕೋಶಾಧಿಕಾರಿ ಶರತ್ ಕುಮಾರ್, ಕೇಂದ್ರ ಸಮಿತಿ ಸದಸ್ಯರಾದ ಅಬ್ದುಲ್ ರಹಿಮಾನ್ ಮಾಸ್ತರ್ ಮೊದಲಾದವರು ಇದ್ದರು.