ನವದೆಹಲಿ: ಅತಿಕ್ರಮಣ ತಡೆ ಹಾಗೂ ಜಾನುವಾರಗಳು ಹಳಿ ಮೇಲೆ ಬರುವುದನ್ನು ತಡೆಯುವ ಸಲುವಾಗಿ ಹಳಿಗಳ ಉದ್ದಕ್ಕೂ ತಡೆಗೋಡೆ ನಿರ್ಮಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈಗಾಗಲೇ ತಡೆಗೋಡೆ ನಿರ್ಮಿಸುವ ಕೆಲಸ ಪ್ರಾರಂಭಿಸಿದ್ದು, ಆರು ತಿಂಗಳಲ್ಲಿ 1000 ಕಿ.ಮೀ. ಹಳಿಗಳ ಉದ್ದಕ್ಕೂ ತಡೆಗೋಡೆ ನಿರ್ಮಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೊಸದಾಗಿ ಪ್ರಾರಂಭಿಸಲಾದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಜಾನುವಾರುಗಳು ಸಿಲುಕಿ ಸಾಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದೆ. ಮೊದಲ ಹಂತದಲ್ಲಿ ಗಾಂಧಿನಗರ- ಮುಂಬೈ ಮಾರ್ಗದಲ್ಲಿ ನಿರ್ಮಿಸಲಾಗಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲ್ವೆ ಹಳಿಗೆ ತಡೆಗೋಡೆ ನಿರ್ಮಿಸಲಾಗುವುದು ಎಂದಿದ್ದಾರೆ.