ಕುಂಬಳೆ: ಇಚ್ಲಂಪಾಡಿ ಹಿರಿಯ ಬುನಾದಿ ಶಾಲೆಯಲ್ಲಿ ಇತ್ತೀಚೆಗೆ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ವ್ಯವಸ್ಥಾಪಕ ಗಣೇಶ ರಾವ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ಎಸ್ಆರ್ಎಯುಪಿ ಶಾಲೆ ಕುಬಣೂರಿನ ನಿವೃತ್ತ ಮುಖ್ಯ ಶಿಕ್ಷಕ, ವ್ಯವಸ್ಥಾಪಕ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣ ಕಳತ್ತೂರು, ಮಾತೃ ಸಂಘದ ಅಧ್ಯಕ್ಷೆ ಶ್ರೀಲತಾ ಹಳೆಮನೆ, ಹಳೆ ವಿದ್ಯಾರ್ಥಿ ಸಂಘದ ಸಂಘದ ಅಧ್ಯಕ್ಷ ಎಚ್.ಶಿವರಾಮ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಧಾಕೃಷ್ಣ ಬೆಜಪ್ಪೆ, ಎನ್.ವಿಶ್ವನಾಥ ಆಳ್ವ, ಮಾತೃ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.
2018-19ನೇ ವರ್ಷದಲ್ಲಿ 1ರಿಂದ 6ನೇ ತರಗತಿಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೂ, 7ನೇ ತರಗತಿಯಲ್ಲಿ ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದವರಿಗೆ ನಗದು ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತುಂಗ ಸ್ವಾಗತಿಸಿ, ಅಧ್ಯಾಪಿಕೆ ಸುಲೇಖಾ ಸಿ.ಆರ್ ವಂದಿಸಿದರು. ಪುಷ್ಪರಾಜ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಸಿಹಿ ತಿಂಡಿ ವಿತರಿಸಲಾಯಿತು.


