ಜೆರುಸಲೆಂ: ಜಗತ್ತನ್ನೇ ಕಂಗೆಡಿಸಿರುವ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಔಷದ ಮತ್ತು ಮುಖ್ಯ ವಸ್ತುಗಳ ತಯಾರಿಕೆಗೆ ಅಗತ್ಯವಾದ ಕಚ್ಚಾವಸ್ತುಗಳನ್ನು ರಫ್ತು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಮನವಿ ಮಾಡಿದ್ದಾರೆ.
ಕೊರೋನಾ ವೈರಸ್ ತಡೆಗಟ್ಟಲು ಮುಂದಾಗಿದ್ದು ಈ ಸಂಬಂಧ ಔಷದ ಕಚ್ಚಾವಸ್ತುಗಳ ಪೂರೈಕೆ ಮಾಡುವಂತೆ ಮಿತ್ರ ಮೋದಿ ಅವರ ಜೊತೆ ಮಾತನಾಡಿ ಮನವಿ ಮಾಡಿದ್ದೇನೆ. ನಮ್ಮ ಕೋರಿಕೆಗೆ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ನೆತನ್ಯಾಹು ಹೇಳಿದ್ದಾರೆ. ಜಗತ್ತಿನಾದ್ಯಂತ 5000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕೊರೋನಾ ವೈರಸ್ ವಿರುದ್ಧ ಹೋರಾಡಲು ಭಾರತ ಎಲ್ಲಾ ರೀತಿಯಲ್ಲೂ ಸನ್ನದ್ಧವಾಗಿದ್ದು ದೇಶದಲ್ಲಿ ಕೊರೋನಾ ಹರಡದಂತೆ ತಡೆಯಲು ಔಷಧಗಳನ್ನು ಸಿದ್ಧಪಡಿಸಲು ಅಗತ್ಯವಿರುವ ಕಚ್ಚಾವಸ್ತುಗಳ ಕೊರತೆಯಾಗದಂತೆ ತಡೆಯಲು ವಿದೇಶಗಳಿಗೆ ಈ ವಸ್ತುಗಳನ್ನು ರಫ್ತು ಮಾಡದಿರಲು ನಿರ್ಧರಿಸಿತ್ತು.
ಕರ್ನಾಟಕದ ಕಲಬುರಗಿಯಲ್ಲಿ ಮತ್ತೊಂದು ಕೊರೋನಾ ವೈರಸ್ ಸೋಂಕು ದೃಢಪಟ್ಟಿದ್ದು ಈ ಮೂಲಕ ದೇಶದಲ್ಲಿ ಕೊರೋನಾ ವೈರಾಣು ಪೀಡಿತರ ಸಂಖ್ಯೆ 108ಕ್ಕೇರಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೋಂಕನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.


