ಕೊಚ್ಚಿ: ಕೇರಳದ 30 ಕೆ.ಜಿ. ಚಿನ್ನ ಕಳ್ಳಸಾಗಣೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐ ಎ)ಗೆ ಸೂಚಿಸಿದ ಮಾರನೇ ದಿನವೇ ಎನ್ ಐ ಎ ಸ್ವಪ್ನಾ ಸುರೇಶ್ ಸೇರಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಿಸಿದೆ.
ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವಾಲಯ ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತು ತನಿಖೆ ನಡೆಸುವಂತೆ ಎನ್ ಐ ಎಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಎನ್ ಐ ಎ ಚಿನ್ನ ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸರಿತ್ ಕುಮಾರ್ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರ ವಿರುದ್ಧ ಇಂದು ಎಫ್ ಐ ಆರ್ ದಾಖಲಿಸಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಉಗ್ರ ಕೃತ್ಯಗಳೊಂದಿಗೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸಲು ಎನ್ ಐ ಎ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ವಿವಿಧ ಸೆಕ್ಷನ್ ಗಳಡಿ ಎಫ್ ಐ ಆರ್ ದಾಖಲಿಸಿದೆ. ಆರೋಪಿಗಳು ಭಯೋತ್ಪಾದಕ ಕೃತ್ಯಗಳಿಗೆ ಹಣ ಸಂಗ್ರಹಿಸುವುದು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಸಂಚು ರೂಪಿಸಿರುವ ಬಗ್ಗೆ ಎನ್ ಐ ಎ ತನಿಖೆ ನಡೆಸಲಿದೆ.
ಸಂಘಟಿತ ಕಳ್ಳಸಾಗಣೆ ಕಾರ್ಯಾಚರಣೆಯು ರಾಷ್ಟ್ರೀಯ ಭದ್ರತೆಗೆ ಗಂಭೀರ ಪರಿಣಾಮಗಳನ್ನು ಬೀರಬಹುದು. ಹಾಗಾಗಿ, ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ನಡೆದ ಚಿನ್ನದ ಕಳ್ಳ ಸಾಗಾಣಿಕೆ ಪ್ರಕರಣದ ತನಿಖೆಯನ್ನು ಎನ್ ಐ ಎಗೆ ವಹಿಸಲಾಗಿದೆ ಎಂದು ನಿನ್ನೆ ಕೇಂದ್ರ ಗೃಹಸಚಿವಾಲಯದ ವಕ್ತಾರರು ತಿಳಿಸಿದ್ದರು.


