ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ - ಕೇರಳ ರಾಜ್ಯದ ಕಾಸರಗೋಡು ಗಡಿಭಾಗದಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಲಾಗಿತ್ತು. ಇದೀಗ ದ.ಕ. ಜಿಲ್ಲಾಡಳಿತವು ಕಾಸರಗೋಡು ಗಡಿಭಾಗದಿಂದ ಸಂಚರಿಸುವ ಎಲ್ಲಾ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದು, ದೈನಂದಿನ ಚಟುವಟಿಕೆಗಳಿಗೆ ಪ್ರತಿ ದಿನ ಸಂಚರಿಸುವ ಸಾರ್ವಜನಿಕರು ಸ್ಥಳೀಯ ಗ್ರಾಮ ಪಂಚಾಯತ್ ವತಿಯಿಂದ ಮಾಸಿಕ ಪಾಸ್ ಪಡೆದು ಪಾಸನ್ನು ಚೆಕ್ ಪೋಸ್ಟ್ ಗಳಲ್ಲಿ ತಮ್ಮ ಮಾಹಿತಿಯನ್ನು ದಾಖಲಿಸಿ, ಚೆಕ್ ಪೋಸ್ಟ್ ಗಳಲ್ಲಿ ಪ್ರತಿದಿನ ವೈದ್ಯಕೀಯ ಸ್ಕ್ರೀನಿಂಗ್ ಹಾಗೂ ಕಾಲಕಾಲಕ್ಕೆ ವೈದ್ಯಕೀಯ ಪರೀಕ್ಷೆಗೆ ಒಳಪಡಬೇಕು.


