ಕಾಸರಗೋಡು: ಚೆಮ್ನಾಡು ರಾಜೀವ್ ಗಾಂಧಿ ಕ್ರೀಡಾಂಗಣ ಮತ್ತು ಸ್ಪೋರ್ಟ್ ಸಮಿತಿ ಕೇಂದ್ರದ ನಿರ್ಮಾಣವು ಅತ್ಯಾಧುನಿಕ ಕ್ರೀಡಾಂಗಣವಾಗಲಿದ್ದು, ಉತ್ತಮ ಗುಣಮಟ್ಟದ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲು ಸಾಧ್ಯವಾಗುತ್ತದೆ ಎಂದು ಕಂದಾಯ ಸಚಿವ ಇ ಚಂದ್ರಶೇಖರನ್ ಹೇಳಿದರು.
ರಾಜೀವ್ ಗಾಂಧಿ ಕ್ರೀಡಾಂಗಣ ಮತ್ತು ಚೆಮ್ನಾಡಿನ ಸ್ಪೋರ್ಟ್ ಸಮಿತಿ ಕೇಂದ್ರದ ನಿರ್ಮಾಣ ಕಾರ್ಯಗಳನ್ನು ಕಂದಾಯ ಸಚಿವ ಇ ಚಂದ್ರಶೇಖರನ್ ಸೋಮವಾರ ಉದ್ಘಾಟಿಸಿ ಮಾತನಾಡಿದರು.
12.3 ಕೋಟಿ ರೂ.ಗಳ ವೆಚ್ಚದಲ್ಲಿ ಕ್ರೀಡಾ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ. ಕ್ರೀಡಾಪಟುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಅಗತ್ಯವಾದ ಸೌಲಭ್ಯಗಳಿಗಾಗಿ ಎಚ್.ಎ.ಎಲ್. 50 ಲಕ್ಷ ರೂ. ನೀಡಲಿದೆ. ಉಳಿದವುಗಳನ್ನು ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಮೂಲಕ ಲಭ್ಯವಾಗಲಿದೆ ಎಂದವರು ಮಾಹಿತಿ ನೀಡಿದರು.
ಚೆಂಗಳ ಗ್ರಾಮ ಪಂಚಾಯತಿ ಅಧ್ಯಕ್ಷ ಕಲ್ಲಟ್ರ ಅಬ್ದುಲ್ ಖಾದರ್ ಅಧ್ಯಕ್ಷತೆ ವಹಿಸಿದ್ದರು. ಎಚ್.ಎ.ಎಲ್. ಅಧಿಕಾರಿ ಮುರಳಿ ಕೃಷ್ಣ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಎ.ಡಿ.ಎಂ. ಎನ್.ದೇವಿದಾಸ್ ಮತ್ತು ಕ್ರೀಡಾ ಮಂಡಳಿಯ ಕಾರ್ಯದರ್ಶಿ ಡಾ.ನಸೀಮುದ್ದೀನ್ ಮಾತನಾಡಿದರು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಸ್ವಾಗತಿಸಿ, ಹಣಕಾಸು ಅಧಿಕಾರಿ ಕೆ.ಸತೀಶನ್ ವಂದಿಸಿದರು.

