ಮಂಗಳೂರು: ಮಂಗಳೂರು ನಗರದ ಹೊರವಲಯದಲ್ಲಿರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಕರಾವಳಿ ನಗರ ಮಂಗಳೂರಿನಲ್ಲಿ ಕೇರಳದ ವಿದ್ಯಾರ್ಥಿಗಳಿಂದ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದು ಕರಾವಳಿಗರ ನಿದ್ದೆಗೆಡಿಸಿದೆ.
ಮಂಗಳೂರಿನ ಪ್ರತಿಷ್ಠಿತ ಕಾಲೇಜುಗಳಿಗೆ ಕೇರಳ ರಾಜ್ಯದಿಂದ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಬಂದಿರುತ್ತಾರೆ. ಈ ವಿದ್ಯಾರ್ಥಿಗಳಿಂದ ಮಂಗಳೂರಿನ ಕಾಲೇಜುಗಳು ಕೊರೊನಾ ಹಾಟ್ ಸ್ಪಾಟ್ ಆಗಿ ಬದಲಾಗುತ್ತಿವೆ.
ಬುಧವಾರ ನಗರದ ಶ್ರೀದೇವಿ ನರ್ಸಿಂಗ್ ಕಾಲೆಜು ವಿದ್ಯಾರ್ಥಿಗಳಿಗೆ ಆರ್.ಟಿ-ಪಿಸಿಆರ್ ಪರೀಕ್ಷೆ ಮಾಡುತ್ತಿದ್ದ ವೇಳೆ ಬರೋಬ್ಬರಿ 51 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಸದ್ಯ ನರ್ಸಿಂಗ್ ಕಾಲೇಜನ್ನು ಸೀಲ್ಡೌನ್ ಮಾಡಿಲಾಗಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗಿದ್ದು, ಈಗಾಗಲೇ ಹೊರ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವ ಜನರಿಗೆ ಆರ್.ಟಿ-ಪಿಸಿಆರ್ ವರದಿ ಕಡ್ಡಾಯ ಎಂದು ತಿಳಿಸಲಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು. ಕೋವಿಡ್ ಪರೀಕ್ಷೆ ಹೆಚ್ಚಳ, ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಹಾಗೂ ಕೊರೊನಾ ಲಸಿಕೆ ನೀಡುವುದನ್ನು ಹೆಚ್ಚಳ ಮಾಡುವಂತೆ ಸೂಚಿಸಿದ್ದಾರೆ.
ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಆರ್.ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.
ಮಾರ್ಚ್ 16ರ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 34,863 ಸೋಂಕಿತ ಪ್ರಕರಣಗಳಿದ್ದು, 33,791 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 739 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 331 ಸಕ್ರಿಯ ಪ್ರಕರಣಗಳಿವೆ.



