HEALTH TIPS

ಕೊರೋನಾ ಸೋಂಕು ಏರಿಕೆ ನಡುವೆಯೇ ಸಾಲು ಸಾಲು ಹಬ್ಬಗಳು; ಸೋಂಕು ಹರಡದಂತೆ ಅಗತ್ಯ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದ ಕೇಂದ್ರ

          ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ನಡುವೆಯೇ ಸಾಲು ಸಾಲು ಹಬ್ಬಗಳು ಆಗಮಿಸುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಜನಸಂದಣಿಯನ್ನು ನಿಯಂತ್ರಿಸಿ ಸೋಂಕು ಹರಡದಂತೆ ಅಗತ್ಯ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.


      ಈ ಕುರಿತಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ನಡೆದ ಚರ್ಚೆ ವೇಳೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಈ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ವೇಳೆ ಮಾತನಾಡಿದ ಅವರು, 'ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಪ್ರಸ್ತುತ ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ನಿರ್ಣಾಯಕ ಹಂತವನ್ನು ಎದುರಿಸುತ್ತಿದೆ. ಈ ಹಂತದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಲ್ಲ.. ಕೋವಿಡ್ -19 ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಿ ಎಂದು ಭಲ್ಲಾ ಹೇಳಿದ್ದಾರೆ.

      ಕೋವಿಡ್ -19 ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮಾರ್ಗಸೂಚಿಗಳನ್ನು ಗೃಹ ಸಚಿವಾಲಯ ಮಾರ್ಚ್ 23 ರಂದೇ ಹೊರಡಿಸಿದ್ದು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 'ಟೆಸ್ಟ್-ಟ್ರ್ಯಾಕ್-ಟ್ರೀಟ್' ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಭಲ್ಲಾ ಸೂಚಿಸಿದ್ದಾರೆ. ಅಲ್ಲದೆ ಕೋವಿಡ್-19 ಸಾಂಕ್ರಾಮಿಕದ ನಡವಳಿಕೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು ಮತ್ತು ಶಾಲೆಗಳು, ಉನ್ನತ ಶಿಕ್ಷಣ ಸಂಸ್ಥೆಗಳು, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು, ಶಾಪಿಂಗ್ ಮಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಮನರಂಜನಾ ಪಾರ್ಕ್ ಗಳು, ಜಿಮ್ ಗಳು,ವಸ್ತು ಪ್ರದರ್ಶನಗಳು ಮುಂತಾದ ವಿವಿಧ ಚಟುವಟಿಕೆಗಳಿರುವ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಎಸ್‌ಒಪಿಗಳನ್ನು (ಕೋವಿಡ್ ಮಾರ್ಗಸೂಚಿಗಳು) ಅನುಸರಿಸಬೇಕು ಎಂದು ತಿಳಿಸಿದ್ದಾರೆ.

ಇದಲ್ಲದೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ಪರಿಸ್ಥಿತಿಯ ಮೌಲ್ಯಮಾಪನದ ಆಧಾರದ ಮೇಲೆ, ಜಿಲ್ಲೆ, ಉಪ-ಜಿಲ್ಲೆ ಮತ್ತು ನಗರ ಮತ್ತು ವಾರ್ಡ್ ಮಟ್ಟದಲ್ಲಿ ಸ್ಥಳೀಯ ನಿರ್ಬಂಧಗಳನ್ನು ವಿಧಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

      "ಮುಂಬರುವ ಹಬ್ಬಗಳಾದ ಹೋಳಿ, ಶಾಬ್-ಎ-ಬರಾತ್, ಕೊಯ್ಲು ಹಬ್ಬಗಳು (ಬೈಸಾಕಿ, ಲೋಹ್ರಿ, ಭೋಗಲಿ ಬಿಹು, ಓಣಂ, ಗುಡಿ ಪಾಡ್ವಾ ಇತ್ಯಾದಿ), ಈಸ್ಟರ್, ಈದ್-ಉಲ್-ಫಿತರ್ ಇತ್ಯಾದಿಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸರ್ಕಾರಗಳು ಈ ಹಬ್ಬಗಳ ಸಮಯದಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮೇಲಿನ ಮಾರ್ಗಸೂಚಿಗಳಲ್ಲಿ ಮತ್ತು COVID- 19 ನಿರ್ವಹಣೆಯ ರಾಷ್ಟ್ರೀಯ ನಿರ್ದೇಶನಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಕಾಪಾಡಿಕೊಳ್ಳುವುದು ಮುಂತಾದ ಕೋವಿಡ್-19 ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಭಲ್ಲಾ ಹೇಳಿದ್ದಾರೆ.

        ಈ ಸಂಬಂಧ ಎಲ್ಲಾ ಸಾರ್ವಜನಿಕ ಕೂಟಗಳಲ್ಲಿ ಕೋವಿಡ್-19 ಮಾರ್ಗ ಸೂಚಿಗಳು ಮತ್ತು ಎಸ್‌ಒಪಿಗಳನ್ನು ಸೂಕ್ಷ್ಮವಾಗಿ ಜಾರಿಗೆ ತರಲು ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡುವಂತೆ ಗೃಹ ಕಾರ್ಯದರ್ಶಿ ಭಲ್ಲಾ ಅವರು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಇದಲ್ಲದೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಭಿಯಾನವನ್ನೂ ತೀವ್ರಗೊಳಿಸಬೇಕು ಎಂದು ಭಲ್ಲಾ ಒತ್ತಿ ಹೇಳಿದ್ದು, 'ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪ್ರಸರಣ ಸರಪಳಿಯನ್ನು ಮುರಿಯಬೇಕು. ಇದು ದೇಶದಲ್ಲಿ ಸೋಂಕು ಪ್ರಕರಣಗಳ ಸಂಭವವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

      ಭಾರತದಲ್ಲಿ ಇಂದು 59,118 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದು ಈ ವರ್ಷದಲ್ಲಿ ದಾಖಲಾದ ಗರಿಷ್ಠ ದೈನಂದಿನ ಸೋಂಕು ಪ್ರಮಾಣವಾಗಿದೆ. ಇದರೊಂದಿಗೆ ದೇಶದ ಒಟ್ಟಾರೆ ಸೋಂಕು ಪ್ರಕರಣಗಳೂ ಕೂಡ 1,18,46,652 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ಅಂತೆಯೇ ಸತತ ಮೂರೂವರೆ ತಿಂಗಳ ಬಳಿಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 4 ಲಕ್ಷ ಗಡಿ ದಾಟಿದೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries