ನವದೆಹಲಿ: ಕೊರೋನಾ ಲಾಕ್ ಡೌನ್ ಸಮಯದಲ್ಲಿ ಆರ್.ಬಿ.ಐ. ರೂಪಿಸಿದ್ದ ಲೋನ್ ಮೊರಟೋರಿಯಂ ನೀತಿಯಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೆ ಆರು ತಿಂಗಳ ಲೋನ್ ಮೊರೆಟೋರಿಯಂ ವಿಸ್ತರಿಸಲು ನಿರಾಕರಿಸಿದೆ. ಠೇವಣಿದಾರರ ಮೇಲೆ ಪರಿಣಾಮ ಬೀರುವುದರಿಂದ ಸಂಪೂರ್ಣ ಬಡ್ಡಿ ಮನ್ನಾ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕಳೆದ ವರ್ಷ ಡಿಸೆಂಬರ್ 17 ರಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಸುಪ್ರೀಂ ಕೋರ್ಟ್ ನ ಈ ತೀರ್ಪು ಕೇಂದ್ರ ಸರ್ಕಾರಕ್ಕೆ ನಿರಾಳತೆಯನ್ನುಂಟು ಮಾಡಿದೆ. ಹಣಕಾಸು ನೀತಿಗಳು ಸರ್ಕಾರ ಹಾಗೂ ಆರ್.ಬಿ.ಐ. ನ ವ್ಯಾಪ್ತಿಗೆ ಬರುತ್ತದೆ. ಈ ವಿಚಾರದಲ್ಲಿ ನ್ಯಾಯಾಂಗ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.
ಸುಪ್ರೀಂ ಕೋರ್ಟ್ ನ ಈ ತೀರ್ಪಿನಿಂದಾಗಿ ಸಾಲ ಪಡೆದವರಿಗೆ ಸಾಲದ ಮೇಲಿನ ಚಕ್ರಬಡ್ಡಿ ಕಟ್ಟಲೇಬೇಕಾದ ಅನಿವಾರ್ಯತೆ ಎದುರಾಗಿದೆ.