ತಿರುವನಂತಪುರ: ಬಕ್ರೀದ್ ಹಿನ್ನೆಲೆಯಲ್ಲಿ ಸತತ ಮೂರು ದಿನಗಳವರೆಗೆ ಅಂಗಡಿ-ಮುಗ್ಗಟ್ಟುಗಳನ್ನು ಸಂಪೂರ್ಣ ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಇದರ ಬೆನ್ನಿಗೇ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ರಾಜ್ಯ ಪೋಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಪೋಲೀಸ್ ಮುಖ್ಯಸ್ಥರಿಗೆ ಡಿಜಿಪಿ ನಿರ್ದೇಶನ ನೀಡಿರುವರು.
ಆರಾಧನಾಲಯ/ ಪ್ರಾರ್ಥನಾ ಕೇಂದ್ರಗಳಿಗೆ ಏಕಕಾಲದಲ್ಲಿ ಗರಿಷ್ಠ 40 ಮಂದಿಗೆ ಅವಕಾಶವಿದೆ. ಇದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲಾ ಪೋಲೀಸ್ ಮುಖ್ಯಸ್ಥರು, ಉಪ ವಿಭಾಗೀಯ ಪೋಲೀಸ್ ಅಧಿಕಾರಿಗಳು, ಸ್ಟೇಷನ್ ಹೌಸ್ ಅಧಿಕಾರಿಗಳು ಧಾರ್ಮಿಕ ಮತ್ತು ಸಮುದಾಯದ ಮುಖಂಡರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಪ್ರಾರ್ಥನೆಯ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದವರು ಸೂಚಿಸಿರುವರು.
ವ್ಯಾಪಾರ ಕೇಂದ್ರಗಳಲ್ಲಿನ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ನಿರ್ದಿಷ್ಟ ಗಮನ ನೀಡಬೇಕು. ವ್ಯಾಪಾರಿಗಳ ಪ್ರತಿನಿಧಿಗಳೊಂದಿಗೆ ಸಮಾಲೋಚಿಸಬೇಕು ಸೋಂಕು ಹರಡುವ ಸಾಧ್ಯತೆಯ ನಿಯಂತ್ರಿಸುತ್ತದೆ ಎಂದವರು ತಿಳಿಸಿರುವರು.
ಸಿ ಮತ್ತು ಡಿ ವರ್ಗದ ಪ್ರದೇಶಗಳಿಗೆ ನಿರ್ದಿಷ್ಟ ಗಮನ ನೀಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವಿಶೇಷ ಪ್ರಕಟಣೆಗಳನ್ನು ಮಾಡಬೇಕು. ಈ ವಿಷಯಗಳನ್ನು ಜನರ ಗಮನಕ್ಕೆ ತರಲು ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಪ್ರಾರಂಭಿಸಲಾಗುವುದು. ಇದಕ್ಕಾಗಿ ಸ್ವಯಂಸೇವಾ ಸಂಸ್ಥೆಗಳ ನೆರವು ಖಾತರಿಪಡಿಸಲಾಗುವುದು ಎಂದು ಮಾಹಿತಿ ನೀಡಿರುವರು.


