ಕೊಚ್ಚಿ: 1994ರ ಇಸ್ರೊ ಬೇಹುಗಾರಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ಮೂವರು ಮಾಜಿ ಪೊಲೀಸ್ ಅಧಿಕಾರಿಗಳು ಹಾಗೂ ಗುಪ್ತಚರ ಇಲಾಖೆಯ ಒಬ್ಬ ನಿವೃತ್ತ ಅಧಿಕಾರಿಗೆ ಕೇರಳ ಹೈಕೋರ್ಟ್ ಜಾಮೀನು ನೀಡಿದೆ.
ನ್ಯಾಯಮೂರ್ತಿ ಅಶೋಕ್ ಮೆನನ್ ಅವರು, ಮಾಜಿ ಪೊಲೀಸ್ ಅಧಿಕಾರಿಗಳಾದ ಆರ್. ಬಿ.ಶ್ರೀಕುಮಾರ್, ಎಸ್. ವಿಜಯನ್ ಮತ್ತು ಥಂಪಿ ಎಸ್ ದುರ್ಗಾ ದತ್ ಮತ್ತು ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿ ಪಿ.ಎಸ್. ಜಯಪ್ರಕಾಶ್ ಅವರಿಗೆ ಜಾಮೀನು ನೀಡಿದ್ದಾರೆ.
ಬೇಹುಗಾರಿಕೆ ಪ್ರಕರಣದಲ್ಲಿ ಇಸ್ರೊ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ಮತ್ತು ಮಾಲ್ಡೀವ್ಸ್ನ ಇಬ್ಬರು ಪ್ರಜೆಗಳನ್ನು ಬಂಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಈ ನಾಲ್ವರು ಅಧಿಕಾರಿಗಳು ಸೇರಿದಂತೆ ಇತರೆ 14 ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಈ ನಾಲ್ವರು ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
1994ರ ಬೇಹುಗಾರಿಕೆ ಪ್ರಕರಣದಲ್ಲಿ ನಂಬಿ ನಾರಾಯಣನ್ ಜೊತೆಗೆ, ಮಾಲ್ಡೀವ್ನ ಮರಿಯಮ್ ರಶೀದಾ ಮತ್ತು ಫೌಜಿಯಾ ಹಸನ್ ಎಂಬ ಇಬ್ಬರು ಮಹಿಳೆರನ್ನು ಬಂಧಿಸಲಾಗಿತ್ತು. ಈ ಇಬ್ಬರು ಮಹಿಳೆಯರು ಮೂರು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದರು.