ಧನ್ಬಾದ್: ಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಕೈಬಿಟ್ಟ ಮೂರು ಕಲ್ಲಿದ್ದಲು ಗಣಿಗಳು ಕುಸಿದು ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ನಿರ್ಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ಈಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ನ(ECL) ಗೋಪಿನಾಥ್ಪುರ ಓಪನ್ ಕಾಸ್ಟ್ ಪ್ರಾಜೆಕ್ಟ್(OCP) ನಿಂದ ಕಲ್ಲಿದ್ದಲು ಕಂಪನಿಗಳಿಂದ ನೇಮಕಗೊಂಡ ರಕ್ಷಣಾ ತಂಡ ಮೂವರು ಮಹಿಳೆಯರು ಮತ್ತು ಒಬ್ಬ ಹುಡುಗಿಯ ಮೃತದೇಹವನ್ನು ಹೊರತೆಗೆದಿದ್ದಾರೆ ಎಂದು ಧನ್ಬಾದ್ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್(SDM) ಪ್ರೇಮ್ ಕುಮಾರ್ ತಿವಾರಿ ಅವರು ಹೇಳಿದ್ದಾರೆ.
ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ತಿವಾರಿ, "ಅವಶೇಷಗಳಡಿ ಸಿಲುಕಿರುವ ಇತರರಿಗಾಗಿ ಶೋಧ ನಡೆಯುತ್ತಿದೆ" ಎಂದು ತಿಳಿಸಿದ್ದಾರೆ.
"ಧನಬಾದ್ ನ ನಿರ್ಸಾದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಕೆಲವು ಸಾವು ನೋವುಗಳು ವರದಿಯಾಗಿವೆ. ಜಿಲ್ಲಾಡಳಿತವು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ದೇವರು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಗಾಯಾಳುಗಳಿಗೆ ನೆರವು ನೀಡಲಾಗುವುದು'' ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಟ್ವೀಟ್ ಮಾಡಿದ್ದಾರೆ.