ನವದೆಹಲಿ: ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಐದು ರಾಜ್ಯಗಳು ಸೇರಿದಂತೆ ದೇಶಾದ್ಯಂತ ಕೊರೋನಾ ಅಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ(ಇಸಿಐ) ಶನಿವಾರ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿದೆ.
ಸೀಮಿತ ಸಂಖ್ಯೆಯ ಜನರೊಂದಿಗೆ ಪಾದಯಾತ್ರೆ ಮತ್ತು ಚುನಾವಣಾ ರ್ಯಾಲಿಗಳನ್ನು ನಡೆಸಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ. ಅಲ್ಲದೆ ಚುನಾವಣಾ ಪ್ರಚಾರದ ಅವಧಿಯನ್ನು ಈಗಿರುವ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯ ಬದಲಿಗೆ ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಪ್ರಚಾರ ನಡೆಸಲು ಅವಕಾಶ ನೀಡಿದೆ.
ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ತಮ್ಮ ಸಾರ್ವಜನಿಕ ಸಭೆಗಳನ್ನು ಮತ್ತು ರ್ಯಾಲಿಗಳನ್ನು ಗೊತ್ತುಪಡಿಸಿದ ತೆರೆದ ಜಾಗಗಳಲ್ಲಿ ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ನಡೆಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
COVID-19 ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ, ಚುನಾವಣಾ ಆಯೋಗ ಜನವರಿ 8 ರಂದು ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದಾಗ ಭೌತಿಕ ರ್ಯಾಲಿಗಳು, ರೋಡ್ಶೋಗಳು ಮತ್ತು ಪಾದಯಾತ್ರೆಗಳ ಮೇಲೆ ನಿಷೇಧ ಹೇರಿತ್ತು.