ನವದೆಹಲಿ: ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ತಂದಿದ್ದ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ಅನ್ನು ಪ್ರಧಾನಿ ನರೇಂದ್ರ ಮೋದಿ ರದ್ದುಗೊಳಿಸಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿರುವಂತೆಯೇ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿರ್ಮೌರ್ನಲ್ಲಿ ಪಕ್ಷದ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಸಂವಿಧಾನದ 370ನೇ ವಿಧಿ ರದ್ದುಗೊಳಿಸಲು ಸಾಧ್ಯ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಆದರೆ ಪ್ರಧಾನಿ ಮೋದಿ ಅದನ್ನು ಮಾಡಿ ತೋರಿಸಿದರು ಎಂದು ಹೇಳಿದರು.
2019 ಆಗಸ್ಟ್ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಲಾಗಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಕೇಂದ್ರಾಡಳಿತದ ಎರಡು ಪ್ರತ್ಯೇಕ ಪ್ರದೇಶಗಳಾಗಿ ವಿಂಗಡಿಸಲಾಗಿತ್ತು.ಈ ಸಂದರ್ಭದಲ್ಲಿ ಹಿಮಾಚಲದಲ್ಲಿ ಮಗದೊಮ್ಮೆ ಬಿಜೆಪಿಯನ್ನು ಗೆಲ್ಲಿಸುವಂತೆ ಅಮಿತ್ ಶಾ ಕರೆ ನೀಡಿದರು.
ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.