ಶ್ರೀನಗರ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ(ಪಿಒಕೆ) ಜನರ ಮೇಲೆ ಪಾಕಿಸ್ತಾನ ದೌರ್ಜನ್ಯ ಎಸಗುತ್ತಿದ್ದು, ಅದರ ಪರಿಣಾಮಗಳನ್ನು ಆ ದೇಶ ಅನುಭವಿಸಬೇಕಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಎಚ್ಚರಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಕ್ಕೆ ಪಡೆಯುವ ಕುರಿತು ಸುಳಿವು ನೀಡಿದ ಸಚಿವರು, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ನ ಅವಳಿ ಕೇಂದ್ರಾಡಳಿತ ಪ್ರದೇಶಗಳ ಒಟ್ಟಾರೆ ಅಭಿವೃದ್ಧಿಯ ಗುರಿಯನ್ನು ಪಿಒಕೆಯ ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ಪ್ರದೇಶಗಳನ್ನು ತಲುಪಿದ ನಂತರ ಸಾಧಿಸಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.
'ನಾವು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ನಲ್ಲಿ ನಮ್ಮ ಅಭಿವೃದ್ಧಿಯ ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ನಾವು ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ತಲುಪಿದಾಗ ನಾವು ನಮ್ಮ ಗುರಿಯನ್ನು ಸಾಧಿಸುತ್ತೇವೆ'ಎಂದು ಸಿಂಗ್ ಅವರು 'ಶೌರ್ಯ ದಿವಸ' ಕಾರ್ಯಕ್ರಮವನ್ನು ಉದ್ದೇಶಿಸಿ ಹೇಳಿದರು.
ಪಿಒಕೆಯಲ್ಲಿನ ಜನರ ಮೇಲೆ ಪಾಕಿಸ್ತಾನ ನಡೆಸುತ್ತಿರುವ ದೌರ್ಜನ್ಯವನ್ನು ಉಲ್ಲೇಖಿಸಿದ ರಕ್ಷಣಾ ಸಚಿವರು, ನೆರೆಯ ದೇಶವು ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.
'ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ, ಭಯೋತ್ಪಾದಕರ ಏಕೈಕ ಗುರಿ ಭಾರತವನ್ನು ಗುರಿಯಾಗಿಸುವುದು' ಎಂದು ಅವರು ಹೇಳಿದರು.
2019ರ ಆಗಸ್ಟ್ 5 ರಂದು ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಜನರ ವಿರುದ್ಧದ ತಾರತಮ್ಯವನ್ನು ಕೊನೆಗೊಳಿಸಿತು ಎಂದು ಸಿಂಗ್ ಹೇಳಿದರು.