ನವದೆಹಲಿ: ಭಯೋತ್ಪಾದಕ ಸಂಘಟನೆಗಳು ನಿಧಿ ಸಂಗ್ರಹಕ್ಕೆ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳುತ್ತಿರುವ ಕುರಿತು ಭಾರತದ ಬಳಿ ಪುರಾವೆಗಳಿವೆ ಎಂದು ರಾಷ್ಟ್ರೀಯ ತನಿಖಾ ಏಜೆನ್ಸಿಯ (ಎನ್ಐಎ) ಮಹಾ ನಿರ್ದೇಶಕ ದಿನಕರ್ ಗುಪ್ತಾ ಗುರುವಾರ ಹೇಳಿದರು.
ಶುಕ್ರವಾರದಿಂದ ಆರಂಭವಾಗಲಿರುವ ಎರಡು ದಿನಗಳ ಅಂತರರಾಷ್ಟ್ರೀಯ ಸಚಿವರ ಸಮಾವೇಶದಲ್ಲಿ ಈ ಕುರಿತು ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಸಮಾವೇಶದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಸಚಿವರು ಪಾಲ್ಗೊಳ್ಳುತ್ತಿಲ್ಲ. ಚೀನಾ ಭಾಗವಹಿಸುವ ಕುರಿತು ಖಚಿತಪಡಿಸಿಲ್ಲ ಎಂದು ಅವರು ಪ್ರತಿಕ್ರಿಯಿಸಿದರು.
ಭಯೋತ್ಪಾದನೆ ನಿಗ್ರಹಕ್ಕಾಗಿ ಉಗ್ರ ಚಟುವಟಿಕೆಗಳಿಗೆ ಹಣಕಾಸಿನ ನೆರವು ತಡೆಗಟ್ಟುವ ನಿಟ್ಟಿನಲ್ಲಿ ಗೃಹ ಸಚಿವಾಲಯವು ಹಮ್ಮಿಕೊಂಡಿರುವ ಈ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ದೇಶದಲ್ಲಿ ಎಂಟು ವರ್ಷಗಳಿಂದ ಭಯೋತ್ಪಾದನಾ ಚಟುವಟಿಕೆಗಳು ಕ್ಷೀಣಿಸಿವೆ ಎಂದ ಅವರು, ಜಾಗತಿಕ ಭಯೋತ್ಪಾದನೆಯ ಬೆದರಿಕೆ ಮತ್ತು ಅದಕ್ಕೆ ನೆರವು ನೀಡುವವರ ವಿರುದ್ಧ ಹೋರಾಡಬೇಕಾದ ಅಗತ್ಯವಿದೆ. ಇದಕ್ಕೆ ಅಗತ್ಯವಿರುವ ಮೂಲಸೌಕರ್ಯ, ಕಾರ್ಯ ವಿಧಾನಗಳನ್ನು ಬಲಪಡಿಸಬೇಕಾಗಿದೆ ಎಂದರು.
ಸಮಾವೇಶದಲ್ಲಿ ವಿವಿಧ ದೇಶಗಳ 20ಕ್ಕೂ ಹೆಚ್ಚು ಸಚಿವರು, 73 ದೇಶಗಳ 450 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.