ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಶ್ರೀದತ್ತಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಷಂಭರಪುರ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಡಿಯೋರಿಯಾ ಜಿಲ್ಲೆಯ ನಿವಾಸಿ ಸೋನು ಶಾ(28), ಅವರ ಪತ್ನಿ ಸುಜಾವತಿ (25), ಮಕ್ಕಳಾದ ರುಚಿಕಾ(6) ಮತ್ತು ದಿವ್ಯಾಂಶಿ(4), ಶಾ ಅವರ ಸಹೋದರ ರವಿ (18) ಮತ್ತು ಸಹೋದರಿ ಖುಷಿ (13) ಮೃತಪಟ್ಟಿದ್ದಾರೆ.
'ಸೋನು ಶಾ ಪೇಪರ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ರಜೆಯಿದ್ದ ಕಾರಣ ಶನಿವಾರ ಮುಂಜಾನೆ ಕುಟುಂಬ ಸಮೇತರಾಗಿ ಕಾರಿನಲ್ಲಿ ಊರಿಗೆ ಹೊರಟಿದ್ದರು. ಈ ವೇಳೆ ಕಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಕುಟುಂಬ ಸದಸ್ಯರೆಲ್ಲರೂ ಸಾವನ್ನಪ್ಪಿದ್ದಾರೆ' ಎಂದು ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಕೇಶವ್ ಕುಮಾರ್ ತಿಳಿಸಿದ್ದಾರೆ.
'ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ ಯಾವುದೆಂದು ಈವೆರೆಗೂ ತಿಳಿದಿಲ್ಲ. ಈ ಬಗ್ಗೆ ತನಿಖೆ ನಡೆಸುಲಾಗುತ್ತಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಿದ್ದು, ಕುಟುಂಬ ಸದಸ್ಯರಿಗೆ ಮೃತದೇಹವನ್ನು ಹಸ್ತಾಂತರಿಸಲಾಗುವುದು' ಎಂದು ಎಸ್ಪಿ ಹೇಳಿದ್ದಾರೆ.
ಘಟನೆಯ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿನಾಥ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.