ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಬಹುದು ಎಂಬ ಆತಂಕಕ್ಕೆ ಒಳಗಾಗಿರುವ ಆಮ್ ಆದ್ಮಿ ಪಕ್ಷ ತುರ್ತು ಸಭೆಯನ್ನು ಕರೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಸಿಬಿಐ ಹೆಡ್ ಕ್ವಾರ್ಟರ್ಸ್ನಲ್ಲಿ ಅರವಿಂದ ಕೇಜ್ರಿವಾಲ್ ವಿಚಾರಣೆ ನಡೆಯುತ್ತಿದ್ದು, ಮತ್ತೊಂದೆಡೆ ಪಕ್ಷದ ಕಚೇರಿಯಲ್ಲಿ ತುರ್ತು ಸಭೆ ಹಮ್ಮಿಕೊಳ್ಳಲಾಗಿದೆ.
ಆಮ್ ಆದ್ಮಿ ಪಕ್ಷದ ದೆಹಲಿ ಸಂಚಾಲಕ ಗೋಪಾಲ್ ರೈ ಈ ಸಭೆ ಕರೆದಿದ್ದು, ಜಿಲ್ಲಾ ಅಧ್ಯಕ್ಷರು, ರಾಷ್ಟ್ರೀಯ ಕಾರ್ಯದರ್ಶಿಗಳು ಹಾಗೂ ಇತರ ನಾಯಕರು ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ತೀವ್ರ ವಿಚಾರಣೆಗೆ ಒಳಪಡಿಸಿರುವ ಹಿನ್ನೆಲೆಯಲ್ಲಿ ಈ ತುರ್ತು ಸಭೆಯನ್ನು ಕರೆಯಲಾಗಿದೆ.
ಇನ್ನೊಂದೆಡೆ ಆಪ್ ನಾಯಕರಾರ ರಾಘವ್ ಚಢ, ಸಂಜಯ್ ಸಿಂಗ್ ಮತ್ತಿತರರರು ಸಿಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ಈಗಾಗಲೇ ದೆಹಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ವಶದಲ್ಲಿದ್ದ ಆಪ್ ನಾಯಕರು ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನೂ ಕೂಗಿದ್ದರು.