ಕಾಸರಗೋಡು: ಮಂಜೇಶ್ವರ ವಿಧಾನಸಭಾ ಚುನಾವಣೆ ಸಂದರ್ಭ ಬಿಎಸ್ಪಿ ಅಭ್ಯರ್ಥಿಯೊಬ್ಬರಿಗೆ ಲಂಚದ ಆಮಿಷವೊಡ್ಡಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಬಗ್ಗೆ ಪೊಲೀಸರು ದಾಖಲಿಸಿಕೊಂಕಡಿರುವ ಪ್ರಕರಣವನ್ನು ರದ್ದುಪಡಿಸುವಂತೆ, ಪ್ರಕರಣದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ ನಾಲ್ಕು ಮಂದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯ ಪೂರ್ತಿಗೊಳಿಸಿದ್ದು, ಅ. 10ಕ್ಕೆ ತೀರ್ಪು ಕಾಯ್ದಿರಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಯುವ ಸಂದರ್ಭ ಆರೋಪಿಗಳು ನ್ಯಾಯಾಲಯದಲ್ಲಿ ಖುದ್ದು ಹಾಜರಿರಬೇಕಾದ ಬಗ್ಗೆಯೂ ಅ. 10ರಂದು ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಮಂಜೇಶ್ವರದಿಂದ ವಿಧಾನಸಭೆಗೆ ಬಿಎಸ್ಪಿಯಿಂದ ಸ್ಪರ್ಧಿಸಿದ್ದ ಸುಂದರ ಅವರಿಗೆ ನಾಮಪತ್ರ ಹಿಂದಕ್ಕೆ ಪಡೆಯಲು ಹಣ ಮತ್ತು ಮೊಬೈಲ್ ಲಂಚದ ರೂಪದಲ್ಲಿ ನೀಡಲಾಗಿತ್ತು ಎಂದು ಆರೋಪಿಸಿ ಕೇಸು ನೀಡಲಾಗಿತ್ತು.

