ಕಾಸರಗೋಡು: ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ (ಸಿಪಿಸಿಆರ್ಐ)ಕಾಸರಗೋಡು, ಐಸಿಎಆರ್ (ಇಂಡಿಯನ್ ಕೌನ್ಸಿಲ್ ಫಾರ್ ಅಗ್ರಿಕಲ್ಚರಲ್ ರಿಸರ್ಚ್)ಅಧೀನದಲ್ಲಿ ಸುಸಜ್ಜಿತ ಕೃಷಿ ಕಾಲೇಜು ಆರಂಭಿಸುವಂತೆ ಸಂಸದ ರಾಜಮೋಹನ್ ಉಣ್ಣಿತ್ತಾನ್ ಲೋಕಸಭೆಯಲ್ಲಿ ಆಗ್ರಹಿಸಿದರು. ಇದು ಕೇಂದ್ರ ಸರ್ಕಾರದ ಅತಿ ದೊಡ್ಡದಾದ ಹಾಗೂ ಪುರಾತನ ಕೃಷಿ ಸಂಶೋಧನಾ ಸಂಸ್ಥೆಯಾಗಿದ್ದು, ಕೃಷಿ ಆಧಾರಿತ ಕೇಂದ್ರವಾಗಿರುವ ಇಲ್ಲಿ ಕೃಷಿ ಕಾಲೇಜು ಆರಂಭಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿದೆಯೇ ಎಂಬ ಬಗ್ಗೆ ವಿವರಗಳನ್ನು ನೀಡುವಂತೆ ಕೇಂದ್ರ ಕೃಷಿ ಸಚಿವಾಲಯವನ್ನು ಆಗ್ರಹಿಸಿದ್ದಾರೆ.
ಸಿಪಿಸಿಆರ್ಐ-ಐಸಿಎಆರ್ನ್ನು ಕೇಂದ್ರ ಸರ್ಕಾರ 1916 ರಲ್ಲಿ ಸ್ಥಾಪಿಸಿದ್ದು, ಪ್ರಸಕ್ತ ಕೃಷಿ ಸಂಶೋಧನೆಗೆ ಆದ್ಯತೆ ನೀಡಿ ಕೆಲಸ ಮಾಡುತ್ತಿದೆ. ಇದು ತೆಂಗು, ಅಡಕೆ, ಕೋಕೋ ಸೇರಿದಂತೆ ವಿವಿಧ ಬೆಳೆಗಳ ಸಂಶೋಧನೆಯ ಮೇಲೆ ಕೇಂದ್ರೀಕರಿಸಿದ್ದು, ಕೃಷಿ ಕಾಲೇಜು ಪ್ರಾರಂಭಿಸಲು ಸಂಸ್ಥೆ ನಿಬಂಧನೆಯನ್ವಯ ಯಾವುದೇ ಅವಕಾಶವಿಲ್ಲ. ಕೃಷಿಕಾಲೇಜು ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರದಿಂದಲೂ ಇದುವರೆಗೆ ಯಾವುದೇ ಪ್ರಸ್ತಾವನೆಗಳು ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಕೃಷಿ ಸಚಿವರು ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಈ ಬಗ್ಗೆ ವಿಶೇಷ ಗಮನ ಹರಿಸಿ ಕಾಸರಗೋಡು ಸಿ.ಪಿ.ಸಿ.ಆರ್.ಐ ಅಧೀನದಲ್ಲಿ ಕೃಷಿ ಕಾಲೇಜು ಆರಂಭಿಸಲು ಕೇಂದ್ರ ಸರ್ಕಾರಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸಂಸದ ರಾಜಮೋಹನ್ ಉಣ್ಣಿತ್ತಾನ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

