ನವದೆಹಲಿ: ಸಂಸತ್ ಭದ್ರತಾ ಲೋಪ ಸಂಬಂಧ ಗೃಹ ಸಚಿವ ಅಮಿತ್ ಶಾ ಅವರು ಉತ್ತರಿಸಬೇಕು ಎಂದು ವಿರೋಧ ಪಕ್ಷಗಳು ಪ್ರತಿಭಟಿಸಿದ್ದರಿಂದ, ಶುಕ್ರವಾರ ಲೋಕಸಭೆಯಲ್ಲಿ ಯಾವುದೇ ಚರ್ಚೆಗಳು ನಡೆಯದೆ ಕಲಾಪವನ್ನು ಮುಂದೂಡಲಾಯಿತು.
0
samarasasudhi
ಡಿಸೆಂಬರ್ 15, 2023
ನವದೆಹಲಿ: ಸಂಸತ್ ಭದ್ರತಾ ಲೋಪ ಸಂಬಂಧ ಗೃಹ ಸಚಿವ ಅಮಿತ್ ಶಾ ಅವರು ಉತ್ತರಿಸಬೇಕು ಎಂದು ವಿರೋಧ ಪಕ್ಷಗಳು ಪ್ರತಿಭಟಿಸಿದ್ದರಿಂದ, ಶುಕ್ರವಾರ ಲೋಕಸಭೆಯಲ್ಲಿ ಯಾವುದೇ ಚರ್ಚೆಗಳು ನಡೆಯದೆ ಕಲಾಪವನ್ನು ಮುಂದೂಡಲಾಯಿತು.
ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾಗುತ್ತಿದ್ದಂತೆಯೇ, ವಿರೋಧ ಪಕ್ಷದ ಸದಸ್ಯರು ಪ್ಲೆಕಾರ್ಡ್ ಹಿಡಿದುಕೊಂಡು ಘೋಷಣೆಗಳನ್ನು ಕೂಗಿದರು.
2 ಗಂಟೆಗೆ ಮತ್ತೆ ಕಲಾಪ ಪುನಾರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷಗಳ ಪ್ರತಿಭಟನೆ ಮುಂದುವರಿಯಿತು. ಹೀಗಾಗಿ ಸ್ಪೀಕರ್ ಸ್ಥಾನದಲ್ಲಿ ಕುಳಿತಿದ್ದ ಕೃತಿ ಸೋಲಂಕಿ ದಿನದ ಮಟ್ಟಿಗೆ ಕಲಾಪವನ್ನು ಮುಂದೂಡಿದರು.
ಭದ್ರತಾ ಲೋಪ ಸಂಬಂಧ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು, ಅವರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳ ಸದಸ್ಯರು ಒತ್ತಾಯಿಸಿದರು.
ಜತೆಗೆ, ಸಂಸತ್ ಭವನದ ಒಳಗೆ ಪ್ರವೇಶಿಸಿದ ಆರೋಪಿಗಳಿಗೆ ಪಾಸ್ ನೀಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದೂ ವಿರೋಧ ಪಕ್ಷಗಳು ಆಗ್ರಹಿಸಿದವು.
ವಿರೋಧ ಪಕ್ಷಗಳ ಪ್ರತಿಭಟನೆಯಿಂದಾಗಿ ಸಾಮಾನ್ಯ ಕಡತಗಳ ಮಂಡನೆ ಹಾಗೂ ಸ್ಥಾಯಿ ಸಮಿತಿಯ ವರದಿಗಳನ್ನೂ ಕೈಗೆತ್ತಿಕೊಳ್ಳಲು ಸಾಧ್ಯವಾಗಲಿಲ್ಲ. ಅಪರಾಧ ಕಾನೂನು ಬದಲಿಸುವ ಮೂರು ಮಸೂದೆಗಳ ಮಂಡನೆ ಕೂಡ ಶುಕ್ರವಾರದ ವಿಷಯ ಪಟ್ಟಿಯಲ್ಲಿತ್ತು. ಅದನ್ನೂ ಪರಿಗಣಿಸಲು ಸಾಧ್ಯವಾಗಲಿಲ್ಲ.