ನವದೆಹಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾವಧಿಯಲ್ಲಿ ತಿರುಪತಿಯ ಲಾಡು ತಯಾರಿಸಲು ಬಳಸಿದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಆಗಿರುವ ಆರೋಪ ಕುರಿತು ಸಿಬಿಐ ತನಿಖೆಗೆ ಕೋರಿ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಹೊಸ ಪಿಐಎಲ್ ಸಲ್ಲಿಸಲಾಗಿದೆ.
0
samarasasudhi
ಅಕ್ಟೋಬರ್ 02, 2024
ನವದೆಹಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾವಧಿಯಲ್ಲಿ ತಿರುಪತಿಯ ಲಾಡು ತಯಾರಿಸಲು ಬಳಸಿದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಆಗಿರುವ ಆರೋಪ ಕುರಿತು ಸಿಬಿಐ ತನಿಖೆಗೆ ಕೋರಿ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಹೊಸ ಪಿಐಎಲ್ ಸಲ್ಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ಮತ್ತು ಗ್ಲೋಬಲ್ ಪೀಸ್ ಇನಿಶಿಯೇಟಿವ್ ಸಂಸ್ಥೆಯ ಅಧ್ಯಕ್ಷ ಕೆ.ಎ ಪೌಲ್ ಎಂಬುವರು ಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದಾರೆ. ತಿರುಪತಿ ಲಾಡು ವಿವಾದ ಕುರಿತು ಕೇಂದ್ರೀಯ ತನಿಖಾ ದಳದಿಂದ (ಸಿಬಿಐ) ಸಮಗ್ರ ತನಿಖೆ ನಡೆಸುವಂತೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ತಿರುಪತಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನ ಅಂಶ ಹೊಂದಿದ್ದ ತುಪ್ಪ ಬಳಸಲಾಗಿದೆ ಎಂಬ ಹೇಳಿಕೆಯನ್ನು ಪ್ರಬಲ ಪುರಾವೆಗಳು ಇಲ್ಲದೆಯೇ ಹೇಳಿಕೆ ನೀಡಿದ್ದಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.
'ಈ ಪ್ರಕರಣದ ಸಂಬಂಧ ಎಫ್ಐಆರ್ ದಾಖಲಿಸುವ ಮತ್ತು ಎಸ್ಐಟಿ ತನಿಖೆಗೆ ಆದೇಶಿಸುವ ಮುನ್ನವೇ ಮಾಧ್ಯಮಗಳ ಬಳಿ ಹೋಗಿದ್ದೇಕೆ' ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಪ್ರಶ್ನಿಸಿತ್ತು.
ತಿರುಪತಿ ಲಾಡು ವಿವಾದದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕೆಂದು ಕೋರಿ ಬಿಜೆಪಿ ಮುಖಂಡ ಸುಬ್ರಮಣ್ಯನ್ ಸ್ವಾಮಿ ಒಳಗೊಂಡಂತೆ ಹಲವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಪೀಠವು ನಡೆಸಿದೆ.