ನವದೆಹಲಿ: ರಾಷ್ಟ್ರ ಲಾಂಛನ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
0
samarasasudhi
ನವೆಂಬರ್ 12, 2024
ನವದೆಹಲಿ: ರಾಷ್ಟ್ರ ಲಾಂಛನ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಇಂದು (ಸೋಮವಾರ) ರಾತ್ರಿ 8 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದೆ.
ನವೆಂಬರ್ 7ರಂದು ತಲ್ದಂಗ್ರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಸುಕಾಂತ ಮಜುಂದಾರ್ ಅಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಈಚೆಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಬಿಧಾನನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
'2026ರ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಸಿಂಹಾಸನ ಬಿಜೆಪಿಗೆ ದೊರೆಯುತ್ತಿದೆ. ಈ ಗುರಿ ಸಾಧನೆಗೆ ನಾವು ಎಲ್ಲವನ್ನೂ ಮಾಡುತ್ತೇವೆ' ಎಂದು ಮಿಥುನ್ ಭಾಷಣದಲ್ಲಿ ಹೇಳಿದ್ದರು.
ಲೋಕಸಭಾ ಚುನಾವಣೆ ವೇಳೆ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ಅವರು ಕೋಮವಾದಿ ಹೇಳಿಕೆಗಳನ್ನು ನೀಡಿದ್ದರು ಎಂದೂ ಉಲ್ಲೇಖಿಸಿದ್ದ ಮಿಥುನ್, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದ ಮತದಾರರನ್ನು ಹೆದರಿಸಿ, ಮತದಾನದಿಂದ ದೂರವಿರುವಂತೆ ಮಾಡಲು ಯಾರೂ ಯತ್ನಿಸಬಾರದು ಎಂದು ಎಚ್ಚರಿಸಿದ್ದರು.