ನವದೆಹಲಿ: ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕಿ (ಡಿಜಿಪಿ) ರಶ್ಮಿ ಶುಕ್ಲಾ ಅವರನ್ನು ಡಿಜಿಪಿ ಸ್ಥಾನದಿಂದ ತಕ್ಷಣವೇ ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.
0
samarasasudhi
ನವೆಂಬರ್ 05, 2024
ನವದೆಹಲಿ: ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕಿ (ಡಿಜಿಪಿ) ರಶ್ಮಿ ಶುಕ್ಲಾ ಅವರನ್ನು ಡಿಜಿಪಿ ಸ್ಥಾನದಿಂದ ತಕ್ಷಣವೇ ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.
ಚುನಾವಣಾ ಆಯೋಗವು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಈ ಬಗ್ಗೆ ಸೋಮವಾರ ಪತ್ರ ಬರೆದಿದೆ.
ಡಿಜಿಪಿ ರಶ್ಮಿ ಅವರು ಮಹಾರಾಷ್ಟ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಪ್ರತಿಪಕ್ಷಗಳು ದೂರಿದ್ದ ಬೆನ್ನಲ್ಲೆ ಈ ಬೆಳವಣಿಗೆ ನಡೆದಿದೆ.
'ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಹಾಗೂ ನ್ಯಾಯಸಮ್ಮತವಾಗಿ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ವೇಳೆ ಪಕ್ಷಾತೀತವಾಗಿ ವರ್ತಿಸಬೇಕು' ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಈಚೆಗೆ ನಡೆದಿದ್ದ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಸಿದ್ದರು.
ಮಹಾರಾಷ್ಟ್ರದಲ್ಲಿ ಈಚೆಗೆ ರಾಜಕೀಯ ಪ್ರೇರಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಅವರು, 'ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಿ, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಂತೆ' ಡಿಜಿಪಿ ರಶ್ಮಿ ಅವರಿಗೆ ಸೂಚಿಸಿದ್ದರು.