ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 17 ಮಂದಿ ಮಕ್ಕಳಿಗೆ 'ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ'ವನ್ನು ಡಿ. 26ರಂದು ದೆಹಲಿಯ ಭಾರತ ಮಂಟಪ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಿದ್ದಾರೆ.
ಕೇಂದ್ರಾಡಳಿತ ಪ್ರದೇಶಗಳು ಹಾಗೂ 14 ರಾಜ್ಯಗಳ ಒಟ್ಟು 17 ಮಕ್ಕಳನ್ನು ಈ ಬಾರಿಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದ್ದು, ಇವರಲ್ಲಿ 10 ಬಾಲಕಿಯರು ಹಾಗೂ ಏಳು ಬಾಲಕರು ಇದ್ದಾರೆ.
ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಹೇಳಿಕೆ ಬಿಡುಗಡೆ ಮಾಡಿದೆ. ಕಲೆ, ಸಂಸ್ಕೃತಿ, ಶೌರ್ಯ, ನಾವಿನ್ಯ, ವಿಜ್ಞಾನ ಮತ್ತು ತಂತ್ರಜ್ಞಾನ, ಸಮಾಜ ಸೇವೆ, ಕ್ರೀಡೆ ಹಾಗೂ ಪರಿಸರ ಎಂಬ ಏಳು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಪದಕ, ಪ್ರಮಾಣಪತ್ರ ಹಾಗೂ ಹೊತ್ತಿಗೆಯೊಂದನ್ನು ಪ್ರಶಸ್ತಿಯು ಒಳಗೊಂಡಿದೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೂ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ 'ಸುಪೋಷಣ್ ಪಂಚಾಯತ್' ಯೋಜನೆಯನ್ನು ಅವರು ಉದ್ಘಾಟಿಸಲಿದ್ದಾರೆ. ತಳಮಟ್ಟದಲ್ಲಿಯೇ ಮಕ್ಕಳಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಯೋಜನೆಯನ್ನು ರೂಪಿಸಲಾಗಿದೆ.
ಕಾರ್ಯಕ್ರಮಕ್ಕೂ ಮೊದಲು ಪ್ರಶಸ್ತಿ ಪುರಸ್ಕೃತರೂ ಸೇರಿದಂತೆ ಸುಮಾರು 3,500 ಮಕ್ಕಳು ಮೆರವಣಿಗೆ ನಡೆಸಲಿದ್ದಾರೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ.




