ನವದೆಹಲಿ: ಕೇರಳ ಸರ್ಕಾರದ ಬೇಜವಾಬ್ದಾರಿ ಧೋರಣೆಯೇ ವಯನಾಡ್ ಮುಂಡಕೈ ದುರಂತದ ನೆರವಿಗೆ ವಿಳಂಬವಾಗಲು ಕಾರಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಸಲ್ಲಿಸಿದ ಮನವಿಗೆ ನೀಡಿದ ಉತ್ತರದಲ್ಲಿ ಅಮಿತ್ ಶಾ ಈ ಸ್ಪಷ್ಟನೆ ನೀಡಿದ್ದಾರೆ.
ವಿಪತ್ತು ಸಂತ್ರಸ್ತರಿಗೆ ನೆರವು ನೀಡುವಂತೆ ಕೇರಳ ನವೆಂಬರ್ 13 ರಂದು ವಿವರವಾದ ವರದಿಯನ್ನು ಸಲ್ಲಿಸಿದೆ ಎಂದು ಅಮಿತ್ ಶಾ ಹೇಳಿದರು. ವಿಪತ್ತು ಪೀಡಿತ ಪ್ರದೇಶಗಳಿಗೆ ಪ್ರಧಾನಿ ಭೇಟಿ ನೀಡಿದಾಗ, ವಿಪತ್ತು ಸಂತ್ರಸ್ತರ ಪುನರ್ವಸತಿಗೆ ಭರವಸೆ ನೀಡಿದರು ಮತ್ತು ಮನೆಗಳು, ಶಾಲೆಗಳು ಮತ್ತು ರಸ್ತೆಗಳ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡಲಾಗುಗಿದೆ ಎಂದರು.
ಆದರೆ ಈ ವಿಚಾರದಲ್ಲಿ ರಾಜ್ಯ ಸರ್ಕಾರ ಭಾರಿ ವೈಫಲ್ಯ ಕಂಡಿದೆ ಎಂದು ಆರೋಪಿಸಿದರು. ಇದೇ ವೇಳೆ, ಮರುನಿರ್ಮಾಣಕ್ಕಾಗಿ ಕೇರಳದ 2219 ಕೋಟಿ ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿ ನೇತೃತ್ವದ ಕೇರಳದ ನಿಯೋಗ ನಿನ್ನೆ ಅಮಿತ್ ಶಾ ಅವರನ್ನು ಭೇಟಿ ಮಾಡಿ ವಯನಾಡಿಗೆ ಸಹಾಯ ಕೋರಿದ್ದರು..
ವಿವಿಧ ಸಚಿವಾಲಯಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ಕೇರಳ ಸಲ್ಲಿಸಿರುವ ವರದಿಯನ್ನು ಪರಿಶೀಲಿಸುತ್ತಿದೆ. ಸಮಿತಿಯ ನಿರ್ಧಾರವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಅಮಿತ್ ಶಾ ಹೇಳಿದರು.



