ನವದೆಹಲಿ: ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 14 ಮಂದಿ ನಕ್ಸಲರು ಹತರಾಗಿದ್ದು, ಈ ಕಾರ್ಯಾಚರಣೆಯಿಂದಾಗಿ ನಕ್ಸಲಿಸಂಗೆ ಮತ್ತೊಂದು ಹೊಡೆತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ತಿಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಮಿತ್ ಶಾ, ನಕ್ಸಲ್ ಮುಕ್ತ ಭಾರತವನ್ನು ನಿರ್ಮಿಸುವಲ್ಲಿ ನಮ್ಮ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಗಳನ್ನು ನಡೆಸುತ್ತಿರುತ್ತದೆ. ಇಂದು ನಡೆದ ಕಾರ್ಯಾಚರಣೆಯಿಂದಾಗಿ ನಕ್ಸಲಿಸಂಗೆ ಭಾರಿ ಹೊಡೆತವಾಗಿದೆ ಎಂದು ತಿಳಿಸಿದ್ದಾರೆ.
ಛತ್ತೀಸಗಢ-ಒಡಿಶಾ ಗಡಿಯಲ್ಲಿರುವ ಮೈನ್ಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, 14 ನಕ್ಸಲರು ಮೃತಪಟ್ಟಿದ್ದಾರೆ. ನಕ್ಸಲರ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಪೊಲೀಸ್ ಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಛತ್ತೀಸಗಢ ಕೋಬ್ರಾ ಪಡೆಯು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.

