ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸುವ ಸಂಸತ್ತಿನ ಜಂಟಿ ಸಮಿತಿಯ ವರದಿಯನ್ನು ನಾಳೆ ಸೋಮವಾರ ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ.
ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಮತ್ತು ಸದಸ್ಯ ಸಂಜಯ್ ಜೈಸ್ವಾಲ್ ಸೋಮವಾರ ಲೋಕಸಭೆಯಲ್ಲಿ ವರದಿಯನ್ನು ಮಂಡಿಸಲಿದ್ದಾರೆ ಎಂದು ಲೋಕಸಭಾ ಸಚಿವಾಲಯ ಹೊರಡಿಸಿದ ಬುಲೆಟಿನ್ನಲ್ಲಿ ತಿಳಿಸಿದೆ.
ಸಮಿತಿಯು ಗುರುವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ವರದಿಯನ್ನು ಸಲ್ಲಿಸಿತ್ತು. ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸದಸ್ಯರು ಸೂಚಿಸಿದ ಬದಲಾವಣೆಗಳನ್ನು ಒಳಗೊಂಡಿರುವ ತನ್ನ ವರದಿಯನ್ನು ಸಮಿತಿ ಬುಧವಾರ ಬಹುಮತದ ಮತದಿಂದ ಅಂಗೀಕರಿಸಿತು. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷಗಳು ಈ ಪ್ರಕ್ರಿಯೆಯನ್ನು ವಕ್ಫ್ ಮಂಡಳಿಗಳನ್ನು ನಾಶಮಾಡುವ ಪ್ರಯತ್ನ ಎಂದು ಕರೆದವು.
ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತಾದ ಸಂಸತ್ತಿನ ಜಂಟಿ ಸಮಿತಿ ಕರಡು ಶಾಸನದ ವರದಿಯನ್ನು 15-11 ಬಹುಮತದ ಮತಗಳಿಂದ ಅಂಗೀಕರಿಸಿತು. ವಿರೋಧ ಪಕ್ಷದ ಸದಸ್ಯರು ವರದಿಗೆ ಭಿನ್ನಾಭಿಪ್ರಾಯ ಟಿಪ್ಪಣಿಗಳನ್ನು ಸಲ್ಲಿಸಿದರು.
ಕಳೆದ ವರ್ಷ ಆಗಸ್ಟ್ನಲ್ಲಿ ಲೋಕಸಭೆಯಲ್ಲಿ ಪರಿಚಯಿಸಲಾದ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಆಧುನಿಕತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲು ಪ್ರಯತ್ನಿಸುತ್ತದೆ ಎಂದು ಬಿಜೆಪಿ ಸದಸ್ಯರು ಹೇಳಿದರು. ಮತ್ತೊಂದೆಡೆ, ವಿರೋಧ ಪಕ್ಷಗಳು ಇದನ್ನು ಮುಸ್ಲಿಂ ಸಮುದಾಯದ ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿ ಮತ್ತು ವಕ್ಫ್ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಎಂದು ಹೇಳಿವೆ.




