ಮಧೂರು: ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಗೆ ಸಜ್ಜುಗೊಂಡಿರುವ ಕಾಸರಗೋಡಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಮಧೂರು ಶ್ರೀ ಮದನಂತೆಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಕಳಶಪ್ರಾಯವಾಗಿರುವ ಶಿಲಾಮಯ ಮಹಾ ದ್ವಾರದ ಶಿಖರ ಪ್ರತಿಷ್ಠೆ ಮತ್ತು ಶಿಖರ ಅಭಿಷೇಕ ಕಾರ್ಯಕ್ರಮ ಸೋಮವಾರ ಜರುಗಿತು.
ಬ್ರಹ್ಮಶ್ರೀ ದೇರೆಬೈಲು ಡಾ. ಶಿವಪ್ರಸಾದ ತಂತ್ರಿ ಅವರ ನೇತೃತ್ವ ಹಾಗೂ ಮಾಣಿಲಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಶಿಲಾಮಯ ಮಹಾದ್ವಾರದ ದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ, ದೇವಸ್ಥಾನದ ಪವಿತ್ರಪಾಣಿ ರತನ್ಕುಮಾರ್ ಕಾಮಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಟಿ ಮೊದಲಾದವರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಕಲಶಪೂಜೆ, ವಾಸ್ತುಪೂಜೆ, ವಾಸ್ತು ಹೋಮ ನಡೆಯಿತು. ನಂತರ ಕಲಶಗಳನ್ನು ಶ್ರೀದೇವರ ನಡೆಯಲ್ಲಿರಿಸಿ ಪ್ರಾರ್ಥನೆ ನಡೆಸಿದ ನಂತರ ಶಿಖರ ಪ್ರತಿಷ್ಠೆ ನೆರವೇರಿಸಲಾಯಿತು.
ನಾಳೆ ಉದ್ಘಾಟನೆ:
ಕೊಡುಗೈ ದಾನಿಗಳಾದ ಮುಂಬೈ ಉದ್ಯಮಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಅವರು ಕೊಡುಗೆಯಗಿ ಮಹಾದ್ವಾರ ನಿರ್ಮಿಸಲಾಗಿದೆ. ಮಹಾದ್ವಾರ ಮತ್ತು ರಾಜಾಂಗಣದ ಉದ್ಘಾಟನೆ ಮಾ.26 ರಂದು ಬೆಳಗ್ಗೆ 10ಕ್ಕೆ ಜರುಗಲಿದೆ. ಸುಮಾರು ಒಂದೂವರೆ ಕೋಟಿ ಗೂ ಹೆಚ್ಚಿನ ವೆಚ್ಚದಲ್ಲಿ ದ್ರಾವಿಡ ಶೈಲಿಯ ಮಹಾದ್ವಾರ ನಿರ್ಮಿಸಲಾಗಿದೆ.
ಕೇಂದ್ರಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಪ್ರವಾಸೋದ್ಯಮ ರಾಜ್ಯ ಸಚಿವ ಸುರೇಶ್ಗೋಪಿ ಮಹಾದ್ವಾರ ಲೋಕಾರ್ಪಣೆಗೊಳಿಸುವರು. ಜಗದ್ಗುರು ಶ್ರೀ ಶಂಕರಾಚಾರ್ಯ ಪರಂಪರೆಯ ಶ್ರೀಮದ್ ಎಡನೀರು ಮಠದ ಪರಮ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದoಗಳವರು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ನ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಯೋಗಿ ಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ, ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡುವರು.



