ರಂಬನ್/ ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯ ಹಲವೆಡೆ ಭಾನುವಾರ ಭಾರಿ ಮಳೆಯಾಗಿದೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈವರೆಗೆ ಮೂವರು ಮೃತಪಟ್ಟಿದ್ದಾರೆ. 100ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ನಿರಂತರವಾಗಿ ಸುರಿದ ಮಳೆಯಿಂದಾಗಿ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಳಿ ಸೇರಿದಂತೆ ಹಲವೆಡೆ ಭೂಕುಸಿತ, ಮಣ್ಣು ಕುಸಿತ ಸಂಭವಿಸಿದೆ.
ಹೀಗಾಗಿ ಹೆದ್ದಾರಿಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.
ರಂಬನ್ನ ಸೆರಿ ಬಗ್ನಾ ಗ್ರಾಮದಲ್ಲಿ ಮೇಘ ಸ್ಫೋಟ ಸಂಭವಿಸಿದ್ದು, ಇದರಿಂದಾಗಿ ಮೂವರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಬಂದ ಮಾಹಿತಿ ಪ್ರಕಾರ ಒಟ್ಟು ಐವರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 40ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. 10 ಮನೆಗಳು ಸಂಪೂರ್ಣವಾಗಿ ನಾಶವಾಗಿದೆ, ಹಲವು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




