ದಾಮೋಹ್ : ನಕಲಿ ಹೃದ್ರೋಗ ತಜ್ಞರಿಂದ ಚಿಕಿತ್ಸೆ ಪಡೆದು 7 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ದಾಮೋಹ್ ಮಿಷನರಿ ಆಸ್ಪತ್ರೆಯ ಕ್ಯಾಥ್ ಲ್ಯಾಬ್ ಅನ್ನು ಮುಚ್ಚಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐವರು ಸರ್ಕಾರಿ ವೈದ್ಯರ ತಂಡವು ಆಸ್ಪತ್ರೆಗೆ ಭೇಟಿ ನೀಡಿ ಕ್ಯಾಥ್ ಲ್ಯಾಬ್ ಅನ್ನು ಸೀಲ್ ಮಾಡಿದೆ ಎಂದು ಅವರು ಹೇಳಿದ್ದಾರೆ.
'ಎಲ್ಲಾ ಪ್ರಕರಣಗಳು ಕ್ಯಾಥ್ ಲ್ಯಾಬ್ಗೆ ಸಂಬಂಧಿಸಿರುವುದರಿಂದ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಪುರಾವೆಗಳನ್ನು ಹೊಂದಿರುವುದರಿಂದ ಜಿಲ್ಲಾಡಳಿತದ ಮಾರ್ಗಸೂಚಿಗಳ ಮೇರೆಗೆ ಕ್ಯಾಥ್ ಲ್ಯಾಬ್ ಅನ್ನು ಸೀಲ್ ಮಾಡಲಾಗಿದೆ' ಎಂದು ತಂಡದ ಸದಸ್ಯ ಡಾ. ವಿಕ್ರಾಂತ್ ಚೌಹಾಣ್ ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದ್ದು, ಮಂಗಳವಾರ ಸ್ಥಳೀಯ ನ್ಯಾಯಾಲಯವು ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮಿಷನರಿ ಆಸ್ಪತ್ರೆಯಲ್ಲಿ ನಕಲಿ ಹೃದ್ರೋಗ ತಜ್ಞರಿಂದ ಚಿಕಿತ್ಸೆ ಪಡೆದ 7 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 'ಡಾ.ಎನ್. ಜಾನ್ ಕ್ಯಾಮ್' ಎಂಬ ವ್ಯಕ್ತಿ ವಿದೇಶದಲ್ಲಿ ಶಿಕ್ಷಣ ಮತ್ತು ತರಬೇತಿ ಪಡೆದಿರುವುದಾಗಿ ಹೇಳಿಕೊಂಡಿದ್ದರು.

