ವಿಶ್ವಸಂಸ್ಥೆ: ಕಳೆದ ಹಲವು ವರ್ಷಗಳಿಂದ ಭಯೋತ್ಪಾದಕರಿಗೆ ತರಬೇತಿ ಹಾಗೂ ಹಣಕಾಸಿನ ನೆರವು ನೀಡುತ್ತಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. ಇದರಿಂದ ಪಾಕಿಸ್ತಾನದ ನೈಜ ಬಣ್ಣ ಬಯಲಾಗಿದ್ದು, ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತದೆ ಎಂದು ವಿಶ್ವಸಂಸ್ಥೆಗೆ ಭಾರತ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಭಯೋತ್ಪಾದಕರಿಗೆ ತರಬೇತಿ ಮತ್ತು ಹಣಕಾಸಿನ ನೆರವು ನೀಡುತ್ತಿರುವುದನ್ನು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಒಪ್ಪಿಕೊಂಡಿದ್ದರು.
ಈ ಕುರಿತು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಉಪ ಪ್ರತಿನಿಧಿ, ರಾಯಭಾರಿ ಯೋಜನಾ ಪಟೇಲ್ ಉಲ್ಲೇಖಿಸಿದ್ದಾರೆ.
ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಚೇರಿಯ 'ವಿಕ್ಟಿಮ್ಸ್ ಆಫ್ ಟೆರರಿಸಂ ಅಸೋಸಿಯೇಷನ್ ನೆಟ್ವರ್ಕ್' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ನೈಜ ಬಣ್ಣ ಬಯಲು ಮಾಡಿದ್ದಾರೆ.
'ಒಂದು ನಿರ್ದಿಷ್ಟ ನಿಯೋಗವು ಈ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು, ಭಾರತದ ವಿರುದ್ಧ ಅಪಪ್ರಚಾರ ಹಾಗೂ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ' ಎಂದು ಅವರು ಹೇಳಿದ್ದಾರೆ.
ಇತ್ತೀಚಿನ ಟಿ.ವಿ ಸಂದರ್ಶನವೊಂದರಲ್ಲಿ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವುದು, ತರಬೇತಿ ಹಾಗೂ ಹಣಕಾಸು ನೆರವನ್ನು ನೀಡುವುದನ್ನು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಒಪ್ಪಿಕೊಂಡಿದ್ದರು ಎಂದು ಅವರು ಬೊಟ್ಟು ಮಾಡಿದ್ದಾರೆ.
'ಭಯೋತ್ಪಾದಕರಿಗೆ ನೆರವು ನೀಡುತ್ತಿರುವುದನ್ನು ಪಾಕಿಸ್ತಾನದ ರಕ್ಷಣಾ ಸಚಿವರು ಬಹಿರಂಗವಾಗಿ ಒಪ್ಪಿಕೊಂಡಿರುವುದು ಯಾವುದೇ ಅಚ್ಚರಿಯನ್ನುಂಟು ಮಾಡಿಲ್ಲ. ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿ ಭಯೋತ್ಪಾದನೆಯನ್ನು ಉತ್ತೇಜಿಸುವ ಹಾಗೂ ಪ್ರದೇಶವನ್ನು ಅಸ್ಥಿರಗೊಳಿಸಿ ಭದ್ರತೆಗೆ ಭೀತಿಯನ್ನಂಟು ಮಾಡುತ್ತಿದೆ. ಜಗತ್ತು ಇನ್ನು ಮುಂದೆ ಕುರುಡಾಗಲು ಸಾಧ್ಯವಿಲ್ಲ. ಇದಕ್ಕಿಂತ ಹೆಚ್ಚೇನು ಹೇಳುವ ಅಗತ್ಯವಿಲ್ಲ' ಎಂದು ಅವರು ಹೇಳಿದ್ದಾರೆ.
ಸ್ಕೈ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕ ಮತ್ತು ಬ್ರಿಟನ್ ಒಳಗೊಂಡಂತೆ ಪಶ್ಚಿಮದ ರಾಷ್ಟ್ರಗಳಿಗಾಗಿ ನಾವು ಸುಮಾರು ಮೂರು ದಶಕಗಳಿಂದ ಈ ಕೊಳಕು ಕೆಲಸ ಮಾಡುತ್ತಿದ್ದೇವೆ ಎಂದು ಖ್ವಾಜಾ ಆಸಿಫ್ ಹೇಳಿದ್ದರು.





