ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಪ್ರಾರಂಭಗೊಂಡಿದ್ದು, ವಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡುವ ಆಧಾರದಲ್ಲಿ ಯಾವುದೇ ಅರ್ಜಿಗಳ ವಿಚಾರಣೆ ನಡೆಸುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಸ್ಪಷ್ಟಪಡಿಸಿದ್ದಾರೆ.
ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲಾಗಲಿ ಅಥವಾ ಅವುಗಳ ಕುರಿತು ನಿರ್ಧಾರ ಕೈಗೊಳ್ಳಲಾಗಲಿ ಸುಪ್ರೀಂ ಕೋರ್ಟ್ಗೆ ಯಾವುದೇ ನಿರ್ಬಂಧಗಳಿಲ್ಲ ಎಂದೂ ಅವರು ಹೇಳಿದರು.
ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಪರ ನ್ಯಾಯಾಲಯದಲ್ಲಿ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಕ್ಫ್ ತಿದ್ದುಪಡಿ ಕಾಯ್ದೆಯು ದೇಶವ್ಯಾಪಿ ಪರಿಣಾಮ ಹೊಂದಿದ್ದು, ಹೀಗಾಗಿ, ಈ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಹೈಕೋರ್ಟ್ಗಳಿಗೆ ಶಿಫಾರಸು ಮಾಡಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದರೆ, ಈ ಮನವಿಯನ್ನು ತಳ್ಳಿ ಹಾಕಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ಎಲ್ಲ ಅರ್ಜಿಗಳ ವಿಚಾರಣೆ ನಡೆಸುವಂತೆ ಒಂದು ಹೈಕೋರ್ಟ್ಗೆ ಸೂಚಿಸಬಹುದಾಗಿದೆ ಎಂದು ಅಭಿಪ್ರಾಯ ಪಟ್ಟರು.
ಭಾರಿ ಪ್ರಮಾಣದ ಭೂಮಿಗಳನ್ನು ವಕ್ಫ್ ಆಸ್ತಿಗಳೆಂದು ಹಕ್ಕು ಚಲಾಯಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಬುಧವಾರ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತು. ಈ ವೇಳೆ, ದಿಲ್ಲಿ ಹೈಕೋರ್ಟ್ ಆವರಣ ಕೂಡಾ ಹಿಂದೊಮ್ಮೆ ವಕ್ಫ್ ಆಸ್ತಿಯಾಗಿತ್ತು ಎಂದು ಹೇಳಲಾಗುತ್ತಿದೆ ಎಂಬುದರತ್ತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಗಮನ ಸೆಳೆದರು.




.webp)
.webp)
