ನವದೆಹಲಿ: ದೇಶ ತೊರೆಯಲು ನಿಗದಿಪಡಿಸಿದ ಗಡುವು ಮೀರಿ ಪಾಕಿಸ್ತಾನದ ಯಾವುದೇ ಪ್ರಜೆ ಭಾರತದಲ್ಲಿ ಉಳಿಯದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಪ್ರಜೆಗಳಿಗೆ ವೀಸಾ ನೀಡುವ ಪ್ರಕ್ರಿಯೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತ ರದ್ದುಪಡಿಸಿದೆ.
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಕೃತ್ಯಕ್ಕೆ ಪ್ರತಿಕ್ರಿಯಾತ್ಮಕ ಕ್ರಮವಾಗಿ ಈ ನಿಲುವು ತಳೆದಿದೆ.
ಭಾರತ ಸದ್ಯ ಪಾಕಿಸ್ತಾನದ ಪ್ರಜೆಗಳಿಗೆ ನೀಡಿರುವ ವೀಸಾಗಳ ಅವಧಿಯು ಏಪ್ರಿಲ್ 27ರಿಂದ ಜಾರಿಗೆ ಬರುವಂತೆ ಮುಕ್ತಾಯವಾಗಲಿದೆ. ವೈದ್ಯಕೀಯ ವೀಸಾ ಏಪ್ರಿಲ್ 29ರವರೆಗೆ ಮಾತ್ರ ಊರ್ಜಿತವಾಗಿರಲಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಪ್ರಕಟಿಸಿದೆ.
ವೀಸಾದ ಅವಧಿ ಮುಗಿಯುವುದರೊಳಗೆ ಸದ್ಯ ಭಾರತದಲ್ಲಿ ನೆಲೆಸಿರುವ ಎಲ್ಲ ಪಾಕಿಸ್ತಾನಿಯರು ದೇಶವನ್ನು ತೊರೆಯಬೇಕು ಎಂದು ಭಾರತ ತಾಕೀತು ಮಾಡಿದೆ. ಇದೇ ವೇಳೆ ಭಾರತೀಯರು ನೆರೆಯ ಪಾಕಿಸ್ತಾನಕ್ಕೆ ಹೋಗುವುದನ್ನು ಕೈಬಿಡಬೇಕು. ಅಲ್ಲದೆ, ಈಗಾಗಲೇ ಪಾಕಿಸ್ತಾನಕ್ಕೆ ಹೋಗಿರುವವರು ಆದಷ್ಟು ಬೇಗ ದೇಶಕ್ಕೆ ಮರಳಬೇಕು ಎಂದು ಹೇಳಿದೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ವೈಯಕ್ತಿಕವಾಗಿ ಕರೆ ಮಾಡಿರುವ ಅಮಿತ್ ಶಾ, ಪಾಕಿಸ್ತಾನದ ಯಾವುದೇ ಪ್ರಜೆ ಗಡುವು ಮೀರಿ ಭಾರತದಲ್ಲಿ ಇರದಂತೆ ನೋಡಿಕೊಳ್ಳಬೇಕು. ಜತೆಗೆ ತಮ್ಮ ತಮ್ಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರನ್ನು ಗಡೀಪಾರು ಮಾಡುವಂತೆಯೂ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಕೃತ್ಯಕ್ಕೆ ಪಾಕಿಸ್ತಾನದ ನೇರ ಸಹಕಾರವಿದೆ ಎಂದು ಪ್ರತಿಪಾದಿಸಿರುವ ಭಾರತ, ಪ್ರತಿಕ್ರಿಯೆಯಾಗಿ ಬುಧವಾರ ಐದು ಕಠಿಣ ಕ್ರಮಗಳನ್ನು ಪ್ರಕಟಿಸಿತ್ತು. ವಾಘಾ ಗಡಿ ಬಂದ್, ಸಿಂಧೂ ನದಿ ನೀರಿನ ಹಂಚಿಕೆ ಒಪ್ಪಂದ ಅಮಾನತು ಇದರಲ್ಲಿ ಸೇರಿವೆ.




