ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತದ ಪ್ರತ್ಯುತ್ತರ ಸಂಬಂಧ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಅಲ್ಲದ ಏಳು ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾತುಕತೆ ನಡೆಸಿದ್ದಾರೆ.
ಈ ಭೀಕರ ದಾಳಿ ಹಿಂದೆ ಗಡಿಯಾಚೆಗಿನ ನಂಟು ಇದೆ ಎಂದು ಉಲ್ಲೇಖಿಸಿರುವ ಭಾರತ, ದಾಳಿಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಹೇಳಿದೆ.
ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.
ಪಹಲ್ಗಾಮ್ ಉಗ್ರರ ದಾಳಿಯನ್ನು ಖಂಡಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೇಳಿಕೆ ನೀಡಿದ ಬೆನ್ನಲ್ಲೇ ಏಳು ರಾಷ್ಟ್ರಗಳ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ.
ಅಲ್ಜೀರಿಯಾ, ಗ್ರೀಸ್, ಗಯಾನಾ, ಪನಾಮ, ಸ್ಲೊವೇನಿಯಾ, ಸಿಯೆರಾ ಲಿಯೋನ್, ಸೊಮಾಲಿಯಾ ಪ್ರತಿನಿಧಿಗಳೊಂದಿಗೆ ಭಯೋತ್ಪಾದನೆ ವಿರುದ್ಧ 'ಶೂನ್ಯ ಸಹಿಷ್ಣುತೆ' ನೀತಿ ಕುರಿತು ಜೈಶಂಕರ್ ಪ್ರತಿಪಾದಿಸಿದ್ದಾರೆ.
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್ ಅವರೊಂದಿಗೂ ಜೈಶಂಕರ್ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ದಾಳಿಕೋರರು, ಆಯೋಜಕರು ಹಾಗೂ ಬೆಂಬಲಿಗರನ್ನು ಕಟಕಟೆಗೆ ತರಬೇಕೆಂಬ ಭಾರತದ ದೃಢಸಂಕಲ್ಪವನ್ನು ಅವರು ಒತ್ತಿ ಹೇಳಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು, ಪಹಲ್ಗಾಮ್ ದಾಳಿಯ ಕುರಿತು ಮಗದೊಮ್ಮೆ ಚರ್ಚಿಸುವ ಸಾಧ್ಯತೆಯಿದೆ.
ಕಾಯಂ ಅಲ್ಲದ ಸದಸ್ಯ ರಾಷ್ಟ್ರಗಳನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗುತ್ತದೆ.




