HEALTH TIPS

ಹಿಂದೂ ಧಾರ್ಮಿಕ ಟ್ರಸ್ಟ್‌ನಲ್ಲಿ ಮುಸ್ಲಿಮರಿಗೂ ಅವಕಾಶ ನೀಡಲು ಸಿದ್ಧರಿದ್ದೀರಾ?: SC

 ವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಆರಂಭಿಸಿದ ಸುಪ್ರೀಂ ಕೋರ್ಟ್, ಹಿಂದೂ ಧಾರ್ಮಿಕ ಟ್ರಸ್ಟ್‌ನಲ್ಲಿ ಮುಸ್ಲಿಮರಿಗೂ ಅವಕಾಶ ನೀಡಲು ಇಚ್ಛಿಸುತ್ತಿದ್ದೀರಾ? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಅರ್ಜಿಗಳ ವಿಚಾರಣೆ ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಎರಡು ಆಯಾಮದ ಪ್ರಶ್ನೆಗಳನ್ನು ಉಭಯ ಪಕ್ಷಗಳ ಮುಂದಿಟ್ಟಿತು.

ನಾವು ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸಬೇಕೇ ಅಥವಾ ಹೈಕೋರ್ಟ್‌ಗೆ ವರ್ಗಾಯಿಸಬೇಕೇ? ಎರಡನೆಯದಾಗಿ, ನೀವು ನಿಜವಾಗಿಯೂ ಏನು ಆಗಬೇಕೆಂದು ಬಯಸುತ್ತಿದ್ದೀರಿ ಮತ್ತು ಏನೆಂದು ವಾದಿಸಲು ಯತ್ನಿಸುತ್ತಿದ್ದೀರಿ ಎಂಬುದನ್ನು ಸಂಕ್ಷಿಪ್ತವಾಗಿ ಸೂಚಿಸಿ? ಎಂದು ಸಿಜೆಐ ಕೇಳಿದರು.

ಎರಡನೇ ಅಂಶವು ನಮಗೆ ಮೊದಲ ಅಂಶದ ಬಗ್ಗೆ ನಿರ್ಧಾರ ಕೈಗೊಳ್ಳಲು ಒಂದು ಹಂತದವರೆಗೆ ಅನುಕೂಲಕರವಾಗಿರುತ್ತದೆ ಎಂದೂ ಅವರು ಹೇಳಿದ್ದಾರೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾಗಿದ್ದು, ವಾದ ಮಂಡಿಸುತ್ತಿದ್ದಾರೆ.

ಸಂಸತ್ತಿನಲ್ಲಿ ಇತ್ತೀಚೆಗೆ ಅಂಗೀಕಾರ ಪಡೆದ ವಕ್ಫ್ ತಿದ್ದುಪಡಿ ಮಸೂದೆಯು ರಾಷ್ಟ್ರಪತಿ ಮುರ್ಮು ಅಂಕಿತದ ಬಳಿಕ ಕಾಯ್ದೆಯಾಗಿ ಜಾರಿಗೆ ಬಂದಿದೆ.

ಈ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಎಐಎಂಐಎಂ ವರಿಷ್ಠ ಅಸಾದುದ್ದೀನ್ ಓವೈಸಿ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ), ಜಮಿಯತ್ ಉಲಮಾ-ಇ-ಹಿಂದ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಕಾಂಗ್ರೆಸ್ ಸಂಸದರಾದ ಇಮ್ರಾನ್ ಪ್ರತಾಪ್‌ಗಢಿ ಮತ್ತು ಮೊಹಮ್ಮದ್ ಜಾವೇದ್ ಸೇರಿದಂತೆ ಸುಮಾರು 72 ಅರ್ಜಿಗಳು ಸಲ್ಲಿಕೆಯಾಗಿವೆ.

ಕಾಯ್ದೆಯ ಸಿಂಧುತ್ವ ಪ್ರಶ್ನಿಸಿದ ಅರ್ಜಿಗಳ ಸಂಬಂಧ ಕೇಂದ್ರವು ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿ, ಈ ವಿಷಯದಲ್ಲಿ ಯಾವುದೇ ಆದೇಶ ಹೊರಡಿಸುವ ಮೊದಲು ನಮ್ಮ ವಾದ ಆಲಿಸಬೇಕೆಂದು ಕೋರಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries