ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿದ ಮೂವರು ಶಂಕಿತ ಉಗ್ರರ ಪತ್ತೆಗೆ ಅವರ ಫೋಟೊಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ಮಾಹಿತಿ ಕೊಟ್ಟವರಿಗೆ ₹20 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಏ.22ರಂದು ಪಹಲ್ಗಾಮ್ನಲ್ಲಿ 26 ಜನ ಅಮಾಯಕರನ್ನು ಭೀಕರವಾಗಿ ಹತ್ಯೆ ಮಾಡಿದ್ದರು.
ಅಲ್ಲಲ್ಲಿ ಪೋಸ್ಟರ್ ಅಂಟಿಸಿರುವ ಪೊಲೀಸರು 'ಭಯೋತ್ಪಾದಕ ಮುಕ್ತ ಜಮ್ಮುಕಾಶ್ಮೀರ' ಎಂದು ಬರೆದಿದ್ದಾರೆ ಎಂದು ಇಂಡಿಯಾ ಟುಡೆ ವರದಿ ತಿಳಿಸಿದೆ. ಅಲ್ಲದೆ ಶಂಕಿತರ ಬಗ್ಗೆ ಮಾಹಿತಿ ನೀಡಿದವರ ಮಾಹಿತಿಯನ್ನು ಗೋಪ್ಯವಾಗಿ ಇಡಲಾಗುವುದು ಎಂದೂ ಪೊಲೀಸರು ಹೇಳಿದ್ದಾರೆ.
ಪಹಲ್ಗಾಮ್ನಿಂದ ಆರು ಕಿ.ಮೀ ದೂರದಲ್ಲಿರುವ ಬೈಸರನ್ ಹುಲ್ಲುಗಾವಲಿನಲ್ಲಿದ್ದ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದರು. ಕುಟುಂಬದವರ ಎದುರೇ 26 ಜನರನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದರು.
ಇದಕ್ಕೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಮೇಲೆ ದಾಳಿ ಮಾಡಿ 9 ಉಗ್ರರ ನೆಲೆಗಳನ್ನು ನಾಶಗೊಳಿಸಿದೆ.




