ನವದೆಹಲಿ: ಭಾರತ ಯಾವುದೇ ಪರಮಾಣು ಬೆದರಿಕೆಗೆ ಹೆದರುವುದಿಲ್ಲ ಎಂದು ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಇದೇ ಮೊದಲ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಮೋದಿ ಮಾತನಾಡಿದರು.
ಪಾಕಿಸ್ತಾನ ವಿರುದ್ಧದ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಭವಿಷ್ಯದಲ್ಲಿ ಪಾಕ್ ನಡುವಳಿಕೆಯ ಮೇಲೆ ನಮ್ಮ ನಡೆ ನಿರ್ಧಾರವಾಗುತ್ತದೆ ಎಂದು ಮೋದಿ ಹೇಳಿದ್ದಾರೆ.
ಪಾಕಿಸ್ತಾನವು ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಭಾರತವನ್ನು ಬೇಡಿಕೊಂಡ ಬಳಿಕವಷ್ಟೇ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು.
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು 'ಅನಾಗರಿಕ ಮುಖ' ಎಂದ ಪ್ರಧಾನಿ, ಮಹಿಳೆಯರ ಹಣೆಯಿಂದ ಸಿಂಧೂರ ಕಸಿದ ಈ ದಾಳಿ ನನ್ನ ಮನಸ್ಸಿನ ಮೇಲೆ ಆಗಾಧ ಪರಿಣಾಮ ಬೀರಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಆಪರೇಷನ್ ಸಿಂಧೂರ ಕೇವಲ ಹೆಸರಲ್ಲ. ಈ ಕಾರ್ಯಾಚರಣೆಯ ಮೂಲಕ ಭಾರತದ ಸಂಕಲ್ಪ ಕಾರ್ಯರೂಪಕ್ಕೆ ಬಂದಿತು. ಈ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹತ್ಯೆ ಮಾಡಲಾಯಿತು ಎಂದು ಮೋದಿ ಹೇಳಿದ್ದಾರೆ.




