ನವದೆಹಲಿ: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಇಂದು(ಮಂಗಳವಾರ) ಜಾರಿ ಮಾಡಿದೆ.
ಈ ಯೋಜನೆಯ ಅಡಿಯಲ್ಲಿ ರಸ್ತೆ ಅಪಘಾತದ ಸಂತ್ರಸ್ತರು ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಮೊದಲ 7 ದಿನಗಳವರೆಗೆ ₹1.5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಮಂಗಳವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.
ಅಧಿಸೂಚನೆಯ ಪ್ರಕಾರ, ಈ ಯೋಜನೆ ('ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ಯೋಜನೆ-2025' ) ಮೇ 5ರಂದು ಜಾರಿಗೆ ಬಂದಿದೆ ಎಂದು ಅದು ಹೇಳಿದೆ.
ರಸ್ತೆ ಅಪಘಾತ ಸಂಭವಿಸಿದಾಗ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಹಲವು ಮಂದಿ ಸಾವಿಗೀಡಾಗುತ್ತಿದ್ದಾರೆ. ಈ ಸಾವುಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಗುರಿಯಾಗಿದೆ. ರಸ್ತೆ ಅಪಘಾತಕ್ಕಿಡಾದ ಯಾವುದೇ ವ್ಯಕ್ತಿ, ಈ ಯೋಜನೆಯ ನಿಬಂಧನೆಗಳಿಗೆ ಅನುಸಾರವಾಗಿ ನಗದು ರಹಿತ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದು, ಇದು ಪೊಲೀಸ್, ಆಸ್ಪತ್ರೆಗಳು ಮತ್ತು ರಾಜ್ಯ ಆರೋಗ್ಯ ಇಲಾಖೆಗಳ ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಅಪಘಾತ ಸಂಭವಿಸಿದ ದಿನಾಂಕದಿಂದ ಗರಿಷ್ಠ 7 ದಿನಗಳವರೆಗೆ ಸಂತ್ರಸ್ತರು ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ₹1.5 ಲಕ್ಷದ ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ.
ಯೋಜನೆಯ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ರಸ್ತೆ ಕಾರ್ಯದರ್ಶಿಯ ನೇತೃತ್ವದಲ್ಲಿ 11 ಸದಸ್ಯರ ಚಾಲನಾ ಸಮಿತಿಯನ್ನು ಸಹ ರಚಿಸಿದೆ. ಈ ಸಮಿತಿಯು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (ಎನ್ಎಚ್ಎ) ಸಿಇಒ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳನ್ನು ಒಳಗೊಂಡಿರುತ್ತದೆ.
ರಸ್ತೆ ಅಪಘಾತದ ಗಾಯಾಳುಗಳಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಯನ್ನು ಮೊದಲು 2024ರ ಮಾರ್ಚ್ನಲ್ಲಿ ಚಂಡೀಗಢದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಯಿತು. ನಂತರ ಅದನ್ನು ಆರು ರಾಜ್ಯಗಳಿಗೆ ವಿಸ್ತರಿಸಲಾಗಿತ್ತು. ಈಗ ಈ ಯೋಜನೆಯನ್ನು ರಾಷ್ಟ್ರವ್ಯಾಪಿ ವಿಸ್ತರಿಸಲಾಗಿದೆ.




