ನವದೆಹಲಿ: ಸುಪ್ರೀಂ ಕೋರ್ಟ್ನ 52ನೆಯ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಬಿ.ಆರ್. ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಯಮೂರ್ತಿ ಗವಾಯಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಈ ವರ್ಷ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ.
ಗವಾಯಿ ಅವರು ಕೆ.ಜಿ. ಬಾಲಕೃಷ್ಣನ್ ಅವರ ನಂತರ ಸಿಜೆಐ ಸ್ಥಾನ ಅಲಂಕರಿಸುತ್ತಿರುವ ದಲಿತ ಸಮುದಾಯದ ವ್ಯಕ್ತಿಯಾಗಿದ್ದಾರೆ.
ನಿಕಟಪೂರ್ವ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸಂಜೀವ್ ಖನ್ನಾ ಅವರು ನಿನ್ನೆ ನಿವೃತ್ತರಾದರು. ಅವರ ಸ್ಥಾನಕ್ಕೆ ಬಿ.ಆರ್ ಗವಾಯಿ ನೇಮಕಗೊಂಡಿದ್ದಾರೆ.
ಬಿ.ಆರ್. ಗವಾಯಿ ಹಿನ್ನೆಲೆ...
1960ರ ನವೆಂಬರ್ 24ರಂದು ಜನಿಸಿದ ಬಿ.ಆರ್. ಗವಾಯಿ, 1985ರ ಮಾರ್ಚ್ನಲ್ಲಿ ವಕೀಲ ವೃತ್ತಿ ಆರಂಭಿಸಿದರು. 1987ರಿಂದ 1990ರವರೆಗೆ ಬಾಂಬೆ ಹೈಕೋರ್ಟ್ನಲ್ಲಿ ಸ್ವತಂತ್ರವಾಗಿ ವಕೀಲಿಕೆ ನಡೆಸಿದರು. 1990ರ ನಂತರದಲ್ಲಿ ಅವರು ನಾಗ್ಪುರ ಪೀಠದಲ್ಲಿ ವಕೀಲ ವೃತ್ತಿ ನಡೆಸಿದರು.
2003ರ ನವೆಂಬರ್ನಲ್ಲಿ ಅವರು ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಆದರು. 2005ರಲ್ಲಿ ಕಾಯಂ ನ್ಯಾಯಮೂರ್ತಿ ಆದರು. 2019ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಯಾಗಿ ಪದೋನ್ನತಿ ಪಡೆದರು.
ನ್ಯಾಯಮೂರ್ತಿ ಗವಾಯಿ ಅವರು ಆರ್.ಎಸ್. ಗವಾಯಿ ಅವರ ಪುತ್ರ. ಆರ್.ಎಸ್. ಗವಾಯಿ ಅವರು ಬೇರೆ ಬೇರೆ ರಾಜ್ಯಗಳ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು.






