ಜಮ್ಮು/ಜೈಪುರ: ಉಧಂಪುರ ವಾಯುನೆಲೆಯಲ್ಲಿ ಪಾಕ್ ಡ್ರೋನ್ನ ಅವಶೇಷ ತಗುಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುರೇಂದ್ರ ಸಿಂಗ್ ಮೋಗಾ ಹುತಾತ್ಮ ಯೋಧ.
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸುವ ಮೊದಲು ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಪಾಕಿಸ್ತಾನದ ಡ್ರೋನ್ ದಾಳಿಗೆ ಒಳಗಾದ ಜಮ್ಮು ಮತ್ತು ಕಾಶ್ಮೀರದ ಉಧಂಪುರ ವಾಯುನೆಲೆಯಲ್ಲಿ ಇವರು ಕರ್ತವ್ಯದಲ್ಲಿದ್ದರು.
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ವಾಯುನೆಲೆಯಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಭಾರತೀಯ ಸೇನೆಯ ವಾಯು ರಕ್ಷಣಾ ಪಡೆ ಹೊಡೆದುರುಳಿಸಿತು. ಈ ವೇಳೆ ಡ್ರೋನ್ ಅವಶೇಷ ತಗುಲಿ ಸುರೇಂದ್ರ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಅವರು ಹುತಾತ್ಮ ಯೋಧನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೇ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ಭಾರತೀಯ ಸೇನೆಯ ಸೈನಿಕ ಮತ್ತು ರಾಜಸ್ಥಾನದ ಪುತ್ರ ಸುರೇಂದ್ರ ಸಿಂಗ್ ಮೋಗಾ ಅವರು ಉಧಂಪುರ ವಾಯುನೆಲೆಯಲ್ಲಿ ರಾಷ್ಟ್ರೀಯ ಭದ್ರತೆಯ ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾಗಿದ್ದಾರೆ. ಅವರು ಹುತಾತ್ಮರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಭಗವಾನ್ ಶ್ರೀ ರಾಮ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ' ಎಂದು ಪ್ರಾರ್ಥಿಸಿದ್ದಾರೆ.




