ಕಾಸರಗೋಡು: ಜಿಲ್ಲೆಯ ಎಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಜಂಟಿ ಸಭೆ ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿತು. ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಕೃತಿಕ ವಿಪತ್ತು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಪ್ರದೇಶದ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಕಂದಾಯ ಅಧಿಕಾರಿಗಳ ಸಭೆಯನ್ನು ಆಯೋಜಿಸಲಾಗಿತ್ತು.
ತ್ರಿಸ್ತರ ಪಂಚಾಯಿತಿ, ನಗರಸಭೆ ಕಾರ್ಯದರ್ಶಿಗಳು, ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈಗಾಗಲೇ ಕೈಗೊಂಡಿರುವ ಚಟುವಟಿಕೆಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಬಗ್ಗೆ ಕೈಗೊಂಡಿರುವ ಕ್ರಮಗಳು, ವಿಪತ್ತು ಪೀಡಿತ ಪ್ರದೇಶಗಳಿಂದ ಸ್ಥಳಾಂತರಿಸಬೇಕಾದ ಕುಟುಂಬಗಳು, ತುರ್ತು ಸಂದರ್ಭದಲ್ಲಿ ಸ್ಥಾಪಿಸಬೇಕಾದ ಶಿಬಿರಗಳು, ಸಮುದ್ರ ಕೊರೆತ ತಡೆಗಟ್ಟುವ ಚಟುವಟಿಕೆಗಳು, ಮುಂಗಾರುಪೂರ್ವ ಶುಚೀಕರಣ ಚಟುವಟಿಕೆಗಳು, ಕಲ್ಲುಗಣಿಗಾರಿಕೆ ತಡೆಗಟ್ಟುವ ಚಟುವಟಿಕೆಗಳು, ಕಡಲ್ಕೊರೆತ ಒಳಗಾಗುವ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಯೋಜನೆ, ಮಲೆನಾಡು ಪ್ರದೇಶಗಳಲ್ಲಿನ ವಿಪತ್ತು ಪೀಡಿತ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಯೋಜನೆ, ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ನಿಯೋಜಿಸಲಾದ ಸ್ವಯಂಸೇವಕರು, ವಿಪತ್ತಿನ ಸಂದರ್ಭ ಕೈಗೊಳ್ಳಬೇಕಾದ ತುರ್ತು ವ್ಯವಸ್ಥೆಗಳು, ವಿದ್ಯುತ್, ಕುಡಿಯುವ ನೀರು ಮತ್ತು ಸಾರಿಗೆ ವ್ಯವಸ್ಥೆ, ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣ, ಭೂಕುಸಿತ, ಭೂಮಿಯಲ್ಲಿ ಉಂಟಾಗುವ ಬಿರುಕು ಇತ್ಯಾದಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

