ಚಂಡೀಗಢ: ದೆಹಲಿಯ ಹೈಕಮಿಷನ್ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ , ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಪಾಕಿಸ್ತಾನ ಮೂಲದ ಹ್ಯಾಂಡ್ಲರ್ಗೆ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ್ದಕ್ಕಾಗಿ ಮೊದಲಿಗೆ ಒಬ್ಬ ಶಂಕಿತನನ್ನು ಬಂಧಿಸಲಾಯಿತು ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.
ಆತನ ವಿಚಾರಣೆಯ ಸಮಯದಲ್ಲಿ ಸಿಕ್ಕಿದ ಮಾಹಿತಿ ಆಧಾರದ ಮೇಲೆ, ಇನ್ನೊಬ್ಬನನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಡಿಜಿಪಿ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ತಾವು ಹಂಚಿಕೊಂಡ ಮಾಹಿತಿಗೆ ಆರೋಪಿಗಳು ಆನ್ಲೈನ್ ಮೂಲಕ ಹಣ ಸ್ವೀಕರಿಸುತ್ತಿದ್ದರು ಎಂದು ಆರಂಭಿಕ ತನಿಖೆಯಲ್ಲಿ ತಿಳಿದುಬಂದಿದೆ.
ಹ್ಯಾಂಡ್ಲರ್ ಜೊತೆ ಅವರು ನಿರಂತರ ಸಂಪರ್ಕದಲ್ಲಿದ್ದು, ಅವನ ಸೂಚನೆಯಂತೆ ಇತರ ಸ್ಥಳೀಯ ಹ್ಯಾಂಡ್ಲರ್ಗಳಿಗೆ ಹಣನ್ನು ರವಾನಿಸುವಲ್ಲಿ ಭಾಗಿಯಾಗಿದ್ದರು ಎಂದು ಅವರು ಹೇಳಿದ್ದಾರೆ.
ಬಂಧಿತರಿದ್ದ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಈ ಕಾರ್ಯಾಚರಣೆಯು ಗಡಿಯಾಚೆಗಿನ ಬೇಹುಗಾರಿಕೆ ಜಾಲಗಳನ್ನು ತೊಡೆದು ಹಾಕುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ರಾಷ್ಟ್ರೀಯ ಭದ್ರತೆಗೆ ನಮ್ಮ ಬದ್ಧತೆಯನ್ನು ಬಲಪಡಿಸುತ್ತದೆ ಎಂದು ಯಾದವ್ ಹೇಳಿದ್ದಾರೆ.
ಹಣಕಾಸಿನ ಜಾಲವನ್ನು ಪತ್ತೆಹಚ್ಚುವುದು ಮತ್ತು ನೆಟ್ವರ್ಕ್ ಒಳಗಿನ ಆಪರೇಟರ್ಗಳು ಹಾಗೂ ಸಂಪರ್ಕಗಳನ್ನು ಗುರುತಿಸುವುದರ ಮೇಲೆ ಗಮನ ಕೇಂದ್ರೀಕರಿಸಿದ್ದು, ಪ್ರೋಟೊಕಾಲ್ ಪ್ರಕಾರ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.




