ವಯನಾಡ್: 26 ಮಂದಿಯ ಹತ್ಯೆಗೆ ಕಾರಣರಾದ ಪಹಲ್ಗಾಮ್ ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮವನ್ನು ತಮ್ಮ ಪಕ್ಷವು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಈ ಸಂಬಂಧ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಈಗಾಗಲೇ ನಿರ್ಣಯವನ್ನು ಅಂಗೀಕರಿಸಿದೆ ಎಂದು ಅವರು ಹೇಳಿದ್ದಾರೆ.
ದಾಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ತ್ವರಿತವಾಗಿ ಹಾಗೂ ಅತ್ಯಂತ ಕಠಿಣವಾಗಿ ಕ್ರಮ ಕೈಗೊಳ್ಳುವ ಭರವಸೆಯಿದೆ ಎಂದು ಅವರು ಹೇಳಿದ್ದಾರೆ.
ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.
ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಕಾಂಗ್ರೆಸ್ ನಾಯಕರು ನೀಡಿದ ಕೆಲವು ಹೇಳಿಕೆಗಳು ವಿವಾದವನ್ನು ಹುಟ್ಟು ಹಾಕಿತ್ತು. ಕಾಂಗ್ರೆಸ್ ಭಯೋತ್ಪಾದಕರ ಹಾಗೂ ಪಾಕಿಸ್ತಾನದ ಪರವಾಗಿ ಮಾತನಾಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.




