ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧಿಕೃತ ನಿವಾಸ 'ಕ್ಲಿಫ್ ಹೌಸ್' ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಭಾನುವಾರ ಬೆದರಿಕೆ ಬಂದಿದ್ದು, ಅದು ಹುಸಿ ಬೆದರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಂಪನೂರು ಪೊಲೀಸ್ ಠಾಣೆಗೆ ಮುಖ್ಯಮಂತ್ರಿ ನಿವಾಸದ ಮೇಲೆ ಬಾಂಬ್ ದಾಳಿಯ ಬೆದರಿಕೆ ಹಾಕಿರುವ ಇ-ಮೇಲ್ ಬಂದಿದ್ದು, ಆರೋಪಿಯನ್ನು ಪತ್ತೆಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ನಿವಾಸದ ಬಳಿ ಬಾಂಬ್ ನಿಷ್ಕ್ರೀಯ ದಳದ ಸಹಾಯದೊಂದಿಗೆ ಸಂಪೂರ್ಣ ತಪಾಸಣೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಈ ವೇಳೆ ಮುಖ್ಯಮಂತ್ರಿ ಹಾಗೂ ಅವರ ಕುಟುಂಬವನ್ನು ಸುರಕ್ಷಿತ ಸ್ಥಳದಲ್ಲಿಡಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ರಾಜ್ಯದ ಪ್ರಮುಖ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಬರುತ್ತಿದ್ದು, ಮುಖ್ಯಮಂತ್ರಿ ನಿವಾಸದ ಮೇಲಿನ ಬೆದರಿಕೆಯೂ ಅದೇ ರೀತಿಯ ಪ್ರಕರಣವಾಗಿರಬಹುದೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.




