ಮಂಗಳೂರು: ತಲಪಾಡಿ ಬಳಿ ಕೆಎಸ್ಆರ್ಟಿಸಿ ಬಸ್ ಢಿಕ್ಕಿಯಾಗಿ ರಿಕ್ಷಾದಲ್ಲಿದ್ದ 6 ಮಂದಿ ಮೃತಪಟ್ಟ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರು ಚಾಲಕನ ಅತಿಯಾದ ವೇಗ ಮತ್ತು ಅಜಾಗರೂಕತೆ ಈ ಅಪಘಾತಕ್ಕೆ ಕಾರಣವಾಗಿದೆ.
ತಪ್ಪಿತಸ್ಥ ಚಾಲಕನ ವಿಚಾರಣೆ ನಡೆಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಮಂಗಳೂರು ವಿಭಾಗದ ಒಂದನೇ ಘಟಕದ ಕೆಎಸ್ಆರ್ಟಿಸಿ ಬಸ್ ತಲಪಾಡಿ ಟೋಲ್ಗೇಟ್ ಬಳಿ ತಲುಪುವಾಗ ಮಧ್ಯಾಹ್ನ 1:45ಕ್ಕೆ ಹೊತ್ತಿಗೆ ಬಸ್ ಚಾಲಕ ನಿಜಲಿಂಗಪ್ಪ ಚಲವಾದಿ ತಮ್ಮ ವಾಹನವನ್ನು ರಸ್ತೆಗೆ ಅಡ್ಡಬಂದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬ್ರೇಕ್ ಹಾಕಿದರು. ಈ ವೇಳೆ ನಿಗಮದ ವಾಹನ ಆಟೋಗೆ ಢಿಕ್ಕಿಯಾಗಿದ್ದು, ಚಾಲಕನು ವಾಹನದ ಸೀಟ್ನಿಂದ ಹೊರಕ್ಕೆ ಹಾರಿ ಓಡಿ ಹೋಗಿದ್ದಾನೆ. ಬಸ್ ಇಳಿಜಾರು ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿ ರಸ್ತೆಪಕ್ಕದಲ್ಲಿ ನಿಲ್ಲಿಸಿದ್ದ ಅಟೋ ಮತ್ತು ಬಸ್ಗೆ ಕಾಯುತ್ತಿದ್ದ ಪ್ರಯಾಣಿಕರಿಗೆ ಢಿಕ್ಕಿಯಾಗಿ ನಿಂತಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಢಿಕ್ಕಿ ಹೊಡೆದ ಅಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಆಟೋಚಾಲಕ ಸೇರಿದಂತೆ ಉಳಿದ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಹಿಂಬದಿಯಿಂದ ಬಸ್ ಢಿಕ್ಕಿಯಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಕ್ರಂ ಪಾಷ ಮಾಹಿತಿ ನೀಡಿದ್ದಾರೆ.
ಅಪಘಾತಕ್ಕೀಡಾಗಿರುವ ಬಸ್ 2025 , ಆ. 27 ರಂದು ಮಾರ್ಗ ಸಂಖ್ಯೆಗೆ ನಿಯೋಜಿಸಿದ್ದು , ಅಪಘಾತ ಸಮಯದವರೆಗೆ 10 ಸುತ್ತುವಳಿಯಲ್ಲಿ ಒಟ್ಟಾರೆ 540ಕಿಮೀ ಕ್ರಮಿಸಿರುತ್ತದೆ. ಅಲ್ಲದೇ ಈ ವಾಹನವು ಆ. 26ರಂದು ನವೀಕರಣ ಆಗಿ ಬಂದಿದ್ದು, ಯಾವುದೇ ತಾಂತ್ರಿಕ ದೋಷದಿಂದ ಸಂಭವಿಸಲು ಸಾಧ್ಯವಿರುವುದಿಲ್ಲ ಎಂದು ಅಕ್ರಂ ಪಾಷ ಸ್ಪಷ್ಟಪಡಿಸಿದ್ದಾರೆ.
ಚಾಲಕ ನಿಜಲಿಂಗಪ್ಪ ಚಲವಾದಿ ಸುಮಾರು 14 ವರ್ಷಗಳಿಂದ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಮಾರ್ಗದಲ್ಲಿಯೇ ಮಂಗಳೂರು-ಕಾಸರಗೋಡು 3 ವರ್ಷಗಳಿಂದ ಬಸ್ ಚಲಾಯಿಸುತ್ತಿದ್ದಾರೆ. ಚಾಲಕರ ಅತಿಯಾದ ವೇಗ ಮತ್ತು ಅಜಾಗರೂಕತೆ ಈ ಅಪಘಾತಕ್ಕೆ ಕಾರಣವಾಗಿದೆ. ಗಾಯಾಳುಗಳಿಗೆ ವೈದ್ಯಕೀಯ ವೆಚ್ಚವನ್ನು ನಿಗಮವು ಭರಿಸಲಿದೆ ಎಂದು ತಿಳಿಸಿದ್ದಾರೆ.
ಅಪಘಾತ ತಪ್ಪಿಸಲು ನಿರಂತರ ತರಬೇತಿ, ತಿಳುವಳಿಕೆ ಮತ್ತು ಜಾಗೃತ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರೂ ಕೂಡಾ ಈ ರೀತಿಯ ಅಪಘಾತಗಳು ಸಂಭವಿಸಿರುವುದು ಅತ್ಯಂತ ದುಃಖಕರ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಪ್ರಕಟನೆಯಲ್ಲಿ ತಿಳಿಸಿದ್ದಾರೆ.




