ನವದೆಹಲಿ: 'ದೇಶದ ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಯೊಂದಿಗೆ ಯಾವುದೇ ಕಾರಣಕ್ಕೂ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.
ಭಾರತದ ಮೇಲೆ ಅಮೆರಿಕ ಹೆಚ್ಚುವರಿ ಸುಂಕ ವಿಧಿಸಿದ ಬೆನ್ನಲ್ಲೇ ಪ್ರಧಾನಿ ಇಂದು (ಗುರುವಾರ) ಸ್ಪಷ್ಟ ಮಾತುಗಳಲ್ಲಿ ತಿರುಗೇಟು ನೀಡಿದ್ದಾರೆ.
'ನಮಗೆ ರೈತರ ಹಿತಾಸಕ್ತಿಯೇ ಮೊದಲ ಆದ್ಯತೆಯಾಗಿದೆ. ಅದಕ್ಕಾಗಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ವೈಯಕ್ತಿಕವಾಗಿ ನಾನು ಬೆಲೆ ತೆರಬೇಕಾಗುತ್ತದೆ. ಅದಕ್ಕೆ ನಾನು ಸಿದ್ಧವಿದ್ದೇನೆ' ಎಂದು ಹೇಳಿದ್ದಾರೆ.
ಹಸಿರು ಕ್ರಾಂತಿಯ ಹರಿಕಾರ, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಮೂರು ದಿನಗಳ ಜಾಗತಿಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಷ್ಯಾದಿಂದ ತೈಲ ಖರೀದಿಸುವ ವಿಚಾರವಾಗಿ ಅಮೆರಿಕದ ಬೆದರಿಕೆಗೆ ಭಾರತ ಮಣಿಯದ ಬೆನ್ನಲ್ಲೇ, ಅಮೆರಿಕ ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಹೆಚ್ಚುವರಿಯಾಗಿ ಶೇಕಡ 25ರಷ್ಟು ಸುಂಕ ಹೇರುವ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಸಹಿ ಹಾಕಿದ್ದರು. ಇದರೊಂದಿಗೆ ಭಾರತದ ಮೇಲೆ ಹೇರಲಾದ ಸುಂಕದ ಪ್ರಮಾಣ ಶೇ 50ಕ್ಕೆ ಏರಿದಂತಾಗಿದೆ.

